ರಾಜ್ಯದಲ್ಲಿ ಭ್ರಷ್ಟ ಸರ್ಕಾರಿ ಆಫೀಸರ್ಸ್ಗೆ ಲೋಕಾ ಶಾಕ್!
Public shock over corrupt government officers in the state!

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಶಿವಮೊಗ್ಗ, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಮತ್ತು ಲಂಚ ಸ್ವೀಕಾರದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ಬೇಟೆ ಮುಂದುವರಿದಿದೆ.
ಬಳ್ಳಾರಿಯಲ್ಲಿ ₹90 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಆಯುಕ್ತ :
ಬಳ್ಳಾರಿಯಲ್ಲಿ ಸಹಾಯಕ ವಾಣಿಜ್ಯ ತೆರಿಗೆ ಆಯುಕ್ತ (ACTO) ಮಲ್ಲಿಕಾರ್ಜುನ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ ಅಧಿಕೃತ ಕೆಲಸ ಮಾಡಿಕೊಡಲು ಸಾರ್ವಜನಿಕರಿಂದ ₹90,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ.
ACF ಕಿರಣ್ ನಿವಾಸ, ಕಚೇರಿಗಳ ಮೇಲೆ ದಾಳಿ :
ಶಿವಮೊಗ್ಗ ಮತ್ತು ಧಾರವಾಡದಲ್ಲಿ ಏಕಕಾಲಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಕಿರಣ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿರುವ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಲಬುರಗಿಯಲ್ಲಿ ಜೆಸ್ಕಾಂ AEEಗೆ ಲೋಕಾ ಶಾಕ್ :
ಕಲಬುರಗಿಯಲ್ಲಿ ಜೆಸ್ಕಾಂ (GESCOM) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಅಮೃತರಾವ್ ಅವರಿಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಬ್ಯಾಂಕ್ ಖಾತೆ, ಆಸ್ತಿ ಪತ್ರಗಳು ಹಾಗೂ ಪ್ರಮುಖ ದಾಖಲೆಗಳನ್ನು ಜಾಲಾಡುತ್ತಿದೆ.
ರಾಯಚೂರಿನಲ್ಲಿ EE ಬಸನಗೌಡಗೆ ಸೇರಿದ 6 ಕಡೆ ರೇಡ್ :
ರಾಯಚೂರಿನಲ್ಲಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ (KBJNL) ಕಾರ್ಯನಿರ್ವಾಹಕ ಎಂಜಿನಿಯರ್ (EE) ಬಸನಗೌಡ ಅವರಿಗೆ ಲೋಕಾ ಶಾಕ್ ನೀಡಿದೆ. ಬಸನಗೌಡ ಅವರಿಗೆ ಸೇರಿದ ಒಟ್ಟು 6 ಕಡೆಗಳಲ್ಲಿ ಅಂದರೆ 3 ಮನೆಗಳು, ಕಚೇರಿ, ಫಾರ್ಮ್ ಹೌಸ್ ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದ್ದಾರೆ.
APMC ಡೆಪ್ಯುಟಿ ಡೈರೆಕ್ಟರ್ ಪುಷ್ಪಾ ಮನೆಯಲ್ಲಿ ಅಪಾರ ಚಿನ್ನಾಭರಣ ಪತ್ತೆ :
ಇನ್ನುಳಿದಂತೆ ಎಪಿಎಂಸಿ (APMC) ಡೆಪ್ಯುಟಿ ಡೈರೆಕ್ಟರ್ ಪುಷ್ಪಾ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮನೆಯ ಮೂಲೆ ಮೂಲೆಯನ್ನೂ ತನಿಖಾ ತಂಡ ಜಾಲಾಡಿದ್ದು, ಪ್ರಾಥಮಿಕ ತನಿಖೆಯಲ್ಲೇ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ವಾಚ್ಗಳು ಪತ್ತೆಯಾಗಿದ್ದು, ಅವುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.




