ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಬ್ಬದ ನಂತರ ರಾಜ್ಯ ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳ ಕುರಿತು ಸುಳಿವು ನೀಡಿರುವ ಶ್ರೀಗಳು, ಅಧಿಕಾರ ಹಸ್ತಾಂತರದ ವಿಷಯದಲ್ಲಿ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಯುಗಾದಿ ಹಬ್ಬದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ,ಆಡಳಿತಾರೂಢ ನಾಯಕರು ಅವರಾಗಿಯೇ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರ ರಾಜಕೀಯ ಸ್ಥಿತ್ಯಂತರಗಳು ಸುಸೂತ್ರವಾಗಿ ನಡೆಯಲಿವೆ ಎಂದು ಮಾರ್ಮಿಕವಾಗಿ ತಿಳಿಸಿದರು. ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳ ನಡುವೆಯೇ ಶ್ರೀಗಳು ನೀಡಿರುವ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಏನಾಗಬಹುದು ಎಂಬ ಕುತೂಹಲ ಮೂಡಿಸಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಅವರೆಲ್ಲರೂ ನಮಗೆ ಬೇಕಾದವರೇ, ಎಲ್ಲರಿಗೂ ಒಳ್ಳೆಯದಾಗಲಿ , ಸದ್ಯಕ್ಕೆ ರಾಜಕಾರಣದಲ್ಲಿ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ನುಡಿದಿದ್ದಾರೆ. ರಾಜ್ಯದ ಮಳೆ ಮತ್ತು ಬೆಳೆಯ ವಿಷಯವಾಗಿ ಜನತೆಗೆ ಅಭಯ ನೀಡಿರುವ ಕೋಡಿ ಶ್ರೀಗಳು, ಈ ವರ್ಷ ಕರ್ನಾಟಕದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಮತ್ತು ಸುಖ-ಶಾಂತಿ ನೆಲೆಸಲಿದೆ ಎಂದು ತಿಳಿಸಿದ್ದಾರೆ. ಆದರೆ ಜಾಗತಿಕ ಮಟ್ಟದಲ್ಲಿ ಪರಿಸ್ಥಿತಿ ಅಷ್ಟು ಆಶಾದಾಯಕವಾಗಿಲ್ಲ ಎಂದು ಎಚ್ಚರಿಸಿದ್ದಾರೆ.


