
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ- ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲೇಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.
ಬೆಂಗಳೂರಿನ ಮೌರ್ಯ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಈರಣ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಕಾರ್ಯಾಧ್ಯಕ್ಷ ಬಸವರಾಜ ಬಸಲಿಗುಂದಿ ಸಿದ್ಧಾರಮಯ್ಯ ವಿರುದ್ಧ ಪಾದಯಾತ್ರೆಯ ಬೆದರಕೆ ಹಾಕಿದರೆ ಪರ್ಯಾಯವಾಗಿ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮ ಮತ್ತು ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಅವರ ಮೇಲೆ ಆರೋಪ ಬಂದಾಕ್ಷಣ ತನಿಖಾ ಆಯೋಗ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂಸಿಂಗ್ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು. ಈಗ ಸಮಸ್ತ ಹಿಂದುಳಿದ ಸಮುದಾಯಗಳು ಜಾಗೃತವಾಗಿವೆ. ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯನವರು ಬಡವರು, ಮಹಿಳೆಯರು, ರೈತರು, ಕಾರ್ಮಿಕರ ಪರ ಇರುವಂತೆ ಈ ವರ್ಗಗಳು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರ ಬಂಡೆಯಂತೆ ನಿಂತಿವೆ ಎಂದು ತಿಳಿಸಿದರು.




