ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯಿಂದ ಭೀಕರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಫೆಬ್ರವರಿ 6ರಂದು ನಡೆದ ಮಸೀದಿ ಸ್ಫೋಟಕ್ಕೆ ಪ್ರತೀಕಾರವಾಗಿ ಭಾರತದ ಪ್ರಮುಖ ದೇವಸ್ಥಾನಗಳನ್ನು ಗುರಿಯಾಗಿಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ವಿಶೇಷವಾಗಿ ಚಾಂದಿನಿ ಚೌಕ್ ಪ್ರದೇಶದಲ್ಲಿರುವ ಐತಿಹಾಸಿಕ ದೇವಸ್ಥಾನದ ಮೇಲೆ ಸ್ಫೋಟಕ ಸಾಧನ ಬಳಸಿ ದಾಳಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ ಎನ್ನಲಾಗಿದ್ದು, ಕೆಂಪುಕೋಟೆ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನವೆಂಬರ್ 10, 2025 ರಂದು ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರ್ ಸ್ಫೋಟದಲ್ಲಿ 12 ಜನರು ಪ್ರಾಣ ಕಳೆದುಕೊಂಡಿದ್ದರು. ಈ ಭೀಕರ ಸ್ಫೋಟದ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ , ಪ್ರಕರಣದ ಆಳವಾದ ತನಿಖೆಗಾಗಿ ಹೆಚ್ಚಿನ ಕಾಲಾವಕಾಶವನ್ನು ಕೋರಿತ್ತು. ಇದನ್ನು ಪರಿಗಣಿಸಿದ ಪಟಿಯಾಲ ಹೌಸ್ ಕೋರ್ಟ್ನ ವಿಶೇಷ ಎನ್ಐಎ ನ್ಯಾಯಾಲಯವು ತನಿಖಾ ಅವಧಿಯನ್ನು ಇತ್ತೀಚೆಗೆ ಫೆಬ್ರವರಿ 13 ರಂದು ಇನ್ನೂ 45 ದಿನಗಳವರೆಗೆ ವಿಸ್ತರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನವನ್ನು ಮಾರ್ಚ್ 13 ರವರೆಗೆ ವಿಸ್ತರಿಸಲಾಗಿದೆ. ಉಗ್ರರು ದೇಶದ ಪ್ರಮುಖ ಧಾರ್ಮಿಕ ಸ್ಥಳಗಳ ಮೇಲೆ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ. ಸಾರ್ವಜನಿಕರು ಕೂಡ ಸಂಶಯಾಸ್ಪದ ವ್ಯಕ್ತಿ ಅಥವಾ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.


