ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರತಿಭಟನಾಕಾರರು, ರೈತರ ಮೇಲೆ ಲಾಠಿ ಬೀಸಿ ತಾನು ಲಿಂಗಾಯತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಯನ್ನು ನೀಡಬೇಕೆಂದು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಉದ್ದೇಶಪೂರ್ವಕವಾಗಿ ಲಾಠಿ ಬೀಸಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯವೆಸಗಿದ್ದ ಕಾಂಗ್ರೆಸ್ ಸರ್ಕಾರದ ಕ್ರಮದ ಮೇಲೆ ನ್ಯಾಯಾಂಗ ತನಿಖೆ ನಡೆಸಲು ಮಾನ್ಯ ಉಚ್ಚ ನ್ಯಾಯಾಲಯ ಆದೇಶಿಸಿದೆ.
ಅಲ್ಲದೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಬಹುಮಾನವನ್ನು ಘೋಷಿಸಿತ್ತು. ಸಾಲು ಸಾಲು ದರೋಡೆ, ಅತ್ಯಾಚಾರವನ್ನು ಹತ್ತಿಕ್ಕಲು ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ಪ್ರತಿಭಟನಾಕಾರರು, ರೈತರ ಮೇಲೆ ಲಾಠಿ ಬೀಸಿ ತಾನು ಲಿಂಗಾಯತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ.
ಕಳ್ಳರು, ದರೋಡೆಕಾರರು, ಅತ್ಯಾಚಾರಿಗಳ ಮೇಲೆ ಬೀಸಬೇಕಾಗಿದ್ದ ಲಾಠಿ ನ್ಯಾಯುತವಾಗಿ, ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಪ್ರಯೋಗಿಸಿರುವುದು ದುರದೃಷ್ಟಕರ. ನ್ಯಾಯಾಂಗ ತನಿಖೆಯು ನಿಷ್ಪಕ್ಷಪಾತವಾಗಿ ನಡೆಯಲಿ ಹಾಗೂ ತಪ್ಪಿತಸ್ಥವಾರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.