ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕದ ವಿಚಾರ ಈಗ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ.
ಈ ಯೋಜನೆಯಲ್ಲಿ ಸ್ಥಳೀಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ವೇಮಗಲ್ ಪಟ್ಟಣ ಪಂಚಾಯತ್ ಸಭೆಯಲ್ಲಿ ಕೈಗಾರಿಕೆಗಳ ವಿರುದ್ಧ ಬಹಿರಂಗವಾಗಿ ಗುಡುಗಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನೇ ಆಹ್ವಾನಿಸದಿರುವುದು ಶಿಷ್ಟಾಚಾರದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೈಗಾರಿಕೆಗಳಿಂದ ಸ್ಥಳೀಯರಿಗೆ ಆಗುತ್ತಿರುವ ತೊಂದರೆಗಳನ್ನು ಪಟ್ಟಿ ಮಾಡಿರುವ ಶಾಸಕರು, ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ವಿದ್ಯುತ್ ವ್ಯವಸ್ಥೆ ಇಲ್ಲದೆ ವೇಮಗಲ್ನಿಂದಲೇ ವಿದ್ಯುತ್ ಪೂರೈಕೆಯಾಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ. ಪರಿಸ್ಥಿತಿ ಸುಧಾರಿಸದಿದ್ದರೆ ಕೈಗಾರಿಕೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಒತ್ತಾಯಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಯುವಕರಿಗೆ ಕೇವಲ ಕಾರ್ಮಿಕ ಕೆಲಸಗಳನ್ನು ನೀಡಿ, ಉನ್ನತ ಹುದ್ದೆಗಳನ್ನು ಹೊರಗಿನವರಿಗೆ ನೀಡಲಾಗುತ್ತಿದೆ ಎಂಬ ಅವರ ಹೇಳಿಕೆ ಈಗ ಜಿಲ್ಲಾದ್ಯಂತ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ.


