ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು.
ಭೂ ಒಡೆತನ ಯೋಜನೆಗಳಲ್ಲಿ ಸರಿಯಾದ ಫಲಾನುಭವಿಗಳಿಗೆ ಭೂಮಿ ಒದಗಿಸದಿರುವುದು ಮತ್ತು ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ವಿಳಂಬವಾಗುತ್ತಿರುವ ಬಗ್ಗೆ ಆರೋಪಗಳ ಹಿನ್ನೆಲೆಯಲ್ಲಿ ಸರ್ಚ್ ವಾರಂಟ್ನೊಂದಿಗೆ ಈ ದಾಳಿ ನಡೆಸಲಾಯಿತು ಎಂದು ವರದಿಯಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಎರಡು ತಂಡಗಳು ಕಚೇರಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಶೋಧ ಕಾರ್ಯದಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಮುಂದಿನ ಕ್ರಮಗಳನ್ನು ಕೈಗೊಳ್ಳಲು ತಯಾರಿ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ ಬಿ.ಕೆ.ಉಮೇಶ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಗೀತಾ ಬೆನಾಳ್, ಇನ್ಸ್ಪೆಕ್ಟರ್ ರಾಜಶೇಖರ್ ಮತ್ತು ಸಿಬ್ಬಂದಿಯವರಾದ ಪ್ರದೀಪ್, ಬಸವರಾಜ್, ಮಲ್ಲಿನಾಥ್, ರಾಣೋಜಿ ಮತ್ತಿತರ ತಂಡ ದಾಳಿ ನಡೆಸಿದೆ.