Top Newsರಾಜಕೀಯಸುದ್ದಿ

ಮಹಾರಾಷ್ಟ್ರಕ್ಕೆ ಫಡ್ನವಿಸ್‌ ಸಿಎಂ, ಪವಾರ್‌ ಡಿಸಿಎಂ – ಇಂದೇ ಅಧಿಕೃತ ಪ್ರಕಟಣೆ

ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್‌ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್‌ ಶಿಂಧೆ ಅವರು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಧಾನಿ ಮೋದಿ, ಅಮಿತ್‌ ಶಾ ನೇತೃತ್ವದಲ್ಲಿ ಇಂದೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಹೆಸರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಗುರುವಾರ ರಾತ್ರಿ ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ ನಡೆಯಿತು. ಮಹಾರಾಷ್ಟ್ರದ ನಿಯೋಜಿತ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಗೂ ಮುನ್ನ ಏಕನಾಥ್‌ ಶಿಂಧೆ ಅವರು ಕೃಷ್ಣ ಮೆನನ್ ಮಾರ್ಗದಲ್ಲಿರುವ ನಿವಾಸದಲ್ಲಿ ಅಮಿತ್‌ ಶಾ ಅವರನ್ನ ಭೇಟಿಯಾದರು. ನಂತರ ಫಡ್ನವಿಸ್‌, ಅಜಿತ್‌ ಪವಾರ್‌ ಚರ್ಚೆಯಲ್ಲಿ ಪಾಲ್ಗೊಂಡರು. ಮುಂಬೈನಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

20 ಖಾತೆ ಉಳಿಸಿಕೊಳ್ಳಲು ಬಿಜೆಪಿ ಪ್ಲ್ಯಾನ್‌:
ಮಹಾರಾಷ್ಟ್ರ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳನ್ನು ಪಡೆದಿರುವ ಬಿಜೆಪಿ ಸುಮಾರು 20 ಸಚಿವ ಸ್ಥಾನಗಳನ್ನು ತನ್ನಲ್ಲೇ ಉಳಿಸಿಕೊಳ್ಳುವ ಪ್ಲ್ಯಾನ್‌ ಮಾಡಿದೆ. ನಂತರದ ಸ್ಥಾನಗಳನ್ನು ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿಗೆ ನೀಡುವ ನಿರೀಕ್ಷೆಯಿದೆ. ಸದ್ಯಕ್ಕೆ ಖಾತೆಗಳ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲವಾದರೂ ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಮನವಿ ಮಾಡಿದ್ದಾರೆ. ಇಂದು ಹೆಚ್ಚಿನ ಚರ್ಚೆಗಾಗಿ ದೆಹಲಿಯಲ್ಲೇ ಉಳಿಯುವ ನಿರೀಕ್ಷೆಯಿದೆ, ಆದರೆ ಫಡ್ನವಿಸ್ ಮತ್ತು ಅಜಿತ್ ಪವಾರ್ ಮುಂಬೈಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Comments (0)

Your email address will not be published. Required fields are marked *

Back to top button