ಮಂಡ್ಯ:ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಸಂಘರ್ಷ ತಾರಕಕ್ಕೇರಿದೆ. ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಹೋರಾಟದ ಕಿಚ್ಚು ಹೆಚ್ಚಾಗಿದೆ.ಹನುಮಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ಕರೆ ಕೊಟ್ಟಿದೆ. ಬಿಜೆಪಿ ಹೋರಾಟಕ್ಕೆ ಜೆಡಿಎಸ್ ನಾಯಕರೂ ಸಾಥ್ ನೀಡಿದ್ದಾರೆ. ಮಂಡ್ಯದಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೆರಗೋಡು ಗ್ರಾಮದಿಂದ ಪಾದಯಾತ್ರೆ ಆರಂಭವಾಗಲಿದೆ.
ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾಷದಯಾತ್ರೆಗೆ ಚಾಲನೆ ನೀಡಲಾಗುತ್ತದೆ. 15ಕಿ.ಮೀ ಸಾಗಲಿರುವ ಪಾದಯಾತ್ರೆ ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂಭ ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುತ್ತದೆ.

ಜೆಡಿಎಸ್-ಬಿಜೆಪಿ ಸೇರಿ 10,000 ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆಯಿದೆ. ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಸಿ.ಟಿ ರವಿ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಪ್ರೀತಂ ಗೌಡ, ಸುರೇಶ್ ಗೌಡ, ಡಿಸಿ ತಮ್ಮಣ್ಣ ಹಾಗೂ ನೂರಾರು ಹಿಂದೂ ಕಾರ್ಯಕರ್ತರು ಸಹ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


