ಭಾರತದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನವದೆಹಲಿಯ ನಿಗಮ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿಸೆಂಬರ್ 26 ರಂದು ಇಹಲೋಕ ಯಾತ್ರೆ ಮುಗಿಸಿದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನಿಗಮ್ ಬೋಧ್ ಘಾಟ್ ನಲ್ಲಿ ನಡೆಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ರಕ್ಷಣಾ ಇಲಾಖೆ ಸಚಿವ ರಾಜ್ನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋನಿ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆ ವೇಳೆ ಭಾಗಿಯಾಗಿದ್ದರು.
ಇಂದು ಕಾಂಗ್ರೆಸ್ನ ಪ್ರಧಾನ ಕಚೇರಿಗೆ ಮನಮೋಹನ್ ಸಿಂಗ್ ಅವರ ಪಾರ್ಥಿವಶರೀರಕ್ಕೆ ಗಣ್ಯರು ಅಂತಿಮ ನಮನ ಸಲ್ಲಿಕೆ ಮಾಡಿದರು. ಬೆಳಗ್ಗೆ 10 ಗಂಟೆಯವರೆಗೆ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದಾದ ಬಳಿಕ ಕಾಂಗ್ರೆಸ್ ಕಚೇರಿಯಿಂದ ಹೊರಟ ಅಂತಿಮ ಯಾತ್ರೆ ಸುಮಾರು 11.30ಕ್ಕೆ ನಿಗಮಬೋಧ್ ಘಾಟ್ಗೆ ಯಾತ್ರೆ ತಲುಪಿತು.
ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆಗೆ ಅನುಕೂಲವಾಗುವಂತೆ ರಿಂಗ್ ರೋಡ್, ನಿಷಾದ್ ರಾಜಮಾರ್ಗ, ಎಸ್ಪಿಎಂ ಮಾರ್ಗದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಕಾಂಗ್ರೆಸ್ ಕಚೇರಿಯಿಂದ ಈ ಮಾರ್ಗದ ಮೂಲಕ ಹೊರಟ ಅಂತಿಮಯಾತ್ರೆ ನಿಗಮಬೋಧ್ ಘಾಟ್ಗೆ ಬಂದು ತಲುಪಿತು.
ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆದವು. ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಿತು. ಸ್ಥಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ವಾದ್ರಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿ ಹಲವು ಕಾಂಗ್ರೆಸ್ ನಾಯಕರು ನೆರೆದಿದ್ದು. ಮನಮೋಹನ್ ಸಿಂಗ್ ಅವರಿಗೆ ಅಂತಿಮ ವಿದಾಯ ಹೇಳಿದರು.


