ಮಲ್ಲೇಶ್ವರಂ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗಿಡಾದ ಪ್ರಕರಣ ಕುರಿತು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಾಲಕನ ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಚಿವರು, ದುರ್ಘಟನೆ ಕುರಿತು ದುಃಖ ವ್ಯಕ್ತಪಡಿಸಿದರು. ಕುಂಟುಬಕ್ಕೆ ಬಿಬಿಎಂಪಿ ಯಿಂದ 5 ಲಕ್ಷ ಹಾಗೂ ಗಾಂಧಿ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ಪರಿಹಾರ ಘೋಷಿಸಿದರು. ಅಲ್ಲದೇ ಬಾಲಕನ ಸಹೋದರಿಯ ಸಂಪೂರ್ಣ ವಿದ್ಯಾಭ್ಯಾಸದ ಹೊಣೆಯನ್ನ ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿದ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಅಗತ್ಯ ತನಿಖೆ ನಡೆಸಲು ಬಿಬಿಎಂಪಿ ಕಮಿಷನರ್ ಗೆ ಸೂಚನೆ ನೀಡಿದರು. 4 ವರ್ಷದ ಹಿಂದೆ ಮೈದಾನಕ್ಕೆ ಗೇಟ್ ಅಳವಡಿಸಲಾಗಿದೆ. ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ಯಾರಿಂದಲೂ ದೂರು ಬಂದಿರಲಿಲ್ಲ. ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.