ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿಬಂದಿದ್ದವು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ.
ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದ್ದು, ಶೀಘ್ರದಲ್ಲೇ ಅದನ್ನು ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಪರಿಷತ್ ಕಲಾಪದಲ್ಲಿಂದು ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಸಿಎಂ, ಶೀಘ್ರದಲ್ಲೇ ಗೃಹಲಕ್ಷ್ಮಿ ಹಣ ನೀಡಲಾಗುವುದು. ಅಲ್ಲದೇ ಪ್ರಣಾಳಿಕೆಯಲ್ಲಿ ಹೇಳಿದಂತೆ 2026-27ನೇ ಸಾಲಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ಸಹ ಕೊಡುತ್ತೇವೆ ಎಂದು ತಿಳಿಸಿದರು.