ಹಾಸನ: ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಶೃತಿ ಎಂಬುವವರನ್ನು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆರಿಗೆಯ ನಂತರ ವೈದ್ಯರ ಬೇಜವಾಬ್ದಾರಿಯಿಂದಾಗಿ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ಬಂದಾಗ ವೈದ್ಯರಿಲ್ಲದೆ ಗಂಟೆಗಟ್ಟಲೆ ಕಾಯಬೇಕಾಯಿತು ಹಾಗೂ ಚಿಕಿತ್ಸೆಯಲ್ಲಿ ವಿಳಂಬ ಮಾಡಲಾಗಿದೆ ಎಂಬುದು ಸಂಬಂಧಿಕರ ಪ್ರಮುಖ ಆರೋಪ.
ಹೆರಿಗೆಯ ನಂತರ ಮೊದಲು ಶೃತಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದ ವೈದ್ಯರು, ನಂತರ ಏಕಾಏಕಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಸಂಬಂಧಿಕರು ಆರು ಬಾಟಲ್ ರಕ್ತ ತಂದುಕೊಟ್ಟರೂ ಪ್ರಯೋಜನವಾಗಿಲ್ಲ. ಅಂತಿಮವಾಗಿ ಮೈಸೂರಿಗೆ ಕರೆದೊಯ್ಯುವಂತೆ ಸೂಚಿಸಲಾಯಿತು. ಆದರೆ ಆಸ್ಪತ್ರೆಯಿಂದ ಅರ್ಧ ಕಿಲೋಮೀಟರ್ ದೂರ ಹೋಗುವಷ್ಟರಲ್ಲೇ ಅಂಬ್ಯುಲೆನ್ಸ್ನಲ್ಲಿ ಶೃತಿ ಮೃತಪಟ್ಟಿದ್ದಾರೆ. “ಸರ್ಕಾರಿ ಆಸ್ಪತ್ರೆಯನ್ನು ನಂಬಿ ಬಂದ ನಮಗೆ ವೈದ್ಯರ ನಿರ್ಲಕ್ಷ್ಯವೇ ಮುಳುವಾಯಿತು” ಎಂದು ಮೃತರ ಪತಿ ಮತ್ತು ಸಂಬಂಧಿಕರು ಆಸ್ಪತ್ರೆಯ ಮುಂದೆ ಕಣ್ಣೀರಿಡುತ್ತಾ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.


