ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಆಹ್ವಾನ ನೀಡಲಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು ಹೊದಿಸಿ, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು.
ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಓ ಎಸ್.ಯುಕೇಶ್ ಕುಮಾರ್, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು. ದಸರಾ ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಈ ನೆಲದ ಪರಂಪರೆ, ಕಲೆ, ಸಂಸ್ಕೃತಿಗಳನ್ನು ಶತಶತಮಾನಗಳಿಂದ ಅನನ್ಯವಾಗಿ ವಿಶ್ವಕ್ಕೆ ಸಾದರಪಡಿಸುತ್ತಿರುವ ಸಾಂಸ್ಕೃತಿಕ ಕಲಾ ಉತ್ಸವ. ದಸರಾ ಹಬ್ಬವು ಒಳಿತಿನ ವಿಜೃಂಭಣೆಯ, ನಾಡಿನ ಕಲಾವಂತಿಕೆ, ಸಾಹಸಗಳನ್ನು ಸಂಭ್ರಮಿಸುವ ಸಡಗರದ ಹಬ್ಬ, ಜನಮನದ ಹಬ್ಬ. ಈ ಹಬ್ಬದಲ್ಲಿ ಪಾಲ್ಗೊಳ್ಳಲು ನಾನು ಅತ್ಯಂತ ಉತ್ಸುಕನಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ..