ಮೈಸೂರು : ಕಳೆದ ಹಲವು ದಿನಗಳಿಂದ ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿದೆ. ಇತ್ತೀಚಿಗೆ ನಂಜನಗೂಡು ತಾಲೂಕಿನ ಗ್ರಾಮವೊಂದರಲ್ಲಿ ಹುಲಿ ದಾಳಿ ನಡೆಸಿತ್ತು. ಹುಲಿ ದಾಳಿಗೆ ಓರ್ವ ಮಹಿಳೆ ಮೃತಪಟ್ಟಿದ್ದರು.

ಇದರ ಬೆನ್ನಲ್ಲೇ ಮೈಸೂರು ತಾಲೂಕಿನ ದಡದಹಳ್ಳಿ ಗ್ರಾಮದ ತೋಟವೊಂದರಲ್ಲಿ ಹುಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ದಡದಹಳ್ಳಿಯ ತೋಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚಲನವಲನ ಪತ್ತೆಗೆ ಟ್ರ್ಯಾಪ್ ಕ್ಯಾಮರಾ, ನೆಟ್ವರ್ಕ್ ಕ್ಯಾಮರಾ, ಐಆರ್ ಕ್ಯಾಮರಾ ಅಳವಡಿಸಲಾಗಿದೆ. ಹಾಗೂ ಹುಲಿ ಸೆರೆಗೆ ಬೋನ್ ಇಡಲಾಗಿದೆ. ಅಲ್ಲದೆ ಹುಲಿ ಕಾಣಿಸಿಕೊಂಡರೆ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಹುಲಿ ಕಾಣಿಸಿಕೊಂಡ ಬಗ್ಗೆ ಯಾರೂ ಸುಳ್ಳು ಸುದ್ದಿ ಹಬ್ಬಿಸಬಾರದು. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಸಹಕಾರ ನೀಡಬೇಕು ಎಂದು ಮೈಸೂರು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.