ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆಯ ನಂತರ ಮಾತನಾಡಿದ ಅವರು, ಈ ಬೆಲೆ ಏರಿಕೆಯು ಜಾಗತಿಕ ಮಟ್ಟದ ಬೆಳವಣಿಗೆಗಳ ಫಲಿತಾಂಶ ಎಂದು ವಿವರಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರ ಪ್ರಕಾರ, ವಿಶ್ವದ ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕುಗಳು ಇತ್ತೀಚಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಭಾರಿ ಪ್ರಮಾಣದಲ್ಲಿ ಖರೀದಿಸಿ ಸಂಗ್ರಹಿಸಿಟ್ಟುಕೊಳ್ಳುತ್ತಿವೆ. ಈ ಜಾಗತಿಕ ಬೇಡಿಕೆಯೇ ಬೆಲೆ ಏರಿಕೆಗೆ ಮುಖ್ಯ ಕಾರಣ. ಭಾರತದ ಆರ್ಬಿಐ ಕೂಡ ಚಿನ್ನದ ಸಂಗ್ರಹವನ್ನು ಹೆಚ್ಚಿಸುತ್ತಿದ್ದರೂ, ಆಮದು ಪ್ರಮಾಣವು ಸದ್ಯಕ್ಕೆ ಆತಂಕ ಪಡುವ ಮಟ್ಟದಲ್ಲಿ ಇಲ್ಲ ಎಂದು ಭರವಸೆ ನೀಡಿದ್ದಾರೆ.
ಅಮೆರಿಕದ ಟ್ಯಾರಿಫ್ ದರ ಬದಲಾವಣೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅಮೆರಿಕವು ಟ್ಯಾರಿಫ್ ಅನ್ನು ಶೇ. 15ಕ್ಕೆ ಹೆಚ್ಚಿಸಿರುವುದು ಭಾರತದ ಮೇಲೆ ಬೀರುವ ಪರಿಣಾಮಗಳನ್ನು ಈಗಲೇ ಅಂದಾಜಿಸುವುದು ಕಷ್ಟ. ಈ ಬಗ್ಗೆ ವಾಣಿಜ್ಯ ಸಚಿವಾಲಯವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಕ್ಕೆ ಭೇಟಿ ನೀಡುವ ಭಾರತೀಯ ನಿಯೋಗವು ಈ ಕುರಿತು ಸಂಧಾನ ನಡೆಸಲಿದೆ ಎಂದು ತಿಳಿಸಿದ್ದಾರೆ.


