ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪಗಳು ನಮ್ಮ ಮುಂದೆ ಇಲ್ಲ ಎಂದು ಅವರು ದೃಢಪಡಿಸಿದ್ದಾರೆ
ಕಾಂಗ್ರೆಸ್ ಮತ್ತು ಎಎಪಿ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬ ಗಾಳಿ ಸುದ್ದಿಗೆ ಎಕ್ಸ್ ಮೂಲಕ ಅವರು ಸ್ಪಷ್ಟನೆ ನೀಡಿರುವ ಕೇಜ್ರಿವಾಲ್, ನಮ್ಮ ಪಕ್ಷ ಏಕಾಂಗಿಯಾಗಿ ಸ್ವಂತ ಬಲದ ಮೇಲೆ ಹೋರಾಟ ನಡೆಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.
ಭರ್ಜರಿ ಸಿದ್ಧತೆಯಲ್ಲಿ ಎಎಪಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಎಎಪಿ ಈಗಾಗಲೇ ಸಜ್ಜಾಗಿದ್ದು, ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನಡುವೆ ಮತ ಪ್ರಚಾರ, ಆಶ್ವಾಸನೆ ನೀಡುವ ಮೂಲಕ ದೆಹಲಿ ಮತದಾರರ ಸೆಳೆಯುವ ಯತ್ನ ನಡೆಸಿದೆ.