ರಾಯಚೂರು: ರಾಯಚೂರು ಮತ್ತು ದೇವಸುಗೂರು ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಮಂಡಳಿಯಿಂದ ಪೈಪ್ಲೈನ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ನೀರಿನ ಸಂಪರ್ಕ ಒದಗಿಸುವಂತೆ ಹಾಗೂ ರಾಯಚೂರು ಗ್ರೋಥ್ ಸೆಂಟರ್ನಲ್ಲಿರುವ ಜಮೀನನ್ನು ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಐಎಡಿಬಿಯಿಂದ ನಿರ್ಮಿಸಲಾದ ವಸತಿ ಗೃಹ ಹಾಗೂ ನಿವೇಶನಗಳಿಗೆ ಪೂರ್ಣ ಹಣ ಸಂದಾಯ ಮಾಡಿದವರಿಗೆ ಹಂಚಿಕೆ ಪತ್ರಗಳನ್ನು ನೀಡಬೇಕು ಮತ್ತು ಹಣ ಸಂದಾಯ ಮಾಡದವರಿಗೆ ಪೂರ್ತಿ ಹಣ ಸಂದಾಯ ಮಾಡಿದ ನಂತರ ಹಂಚಿಕೆ ಮತ್ರಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕೈಗಾರಿಕೆ ಪ್ರದೇಶದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಲು ಅರ್ಜಿ ಸಲ್ಲಿಸಿದವರಿಗೆ ಕೈಗಾರಿಕಾ ಪ್ರದೇಶದಲ್ಲಿ ಜಾಗ ನೀಡಲು ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಬೇಕು ಹಾಗೂ ಅರ್ಜಿ ಸಲ್ಲಿಸಿ ಹಣ ಭರಿಸಿದವರಿಗೆ ಜಾಗ ನೀಡಲು ಯಾವುದೇ ವಿಳಂಬವಾಗಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.