ವಿಜಯನಗರ : ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಚಾಲನೆ ನೀಡಿದರು.
ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಮಾರ್ಚ 4ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಶಾಸಕರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು, ರಾಜ್ಯ ಸರ್ಕಾರವು ಜಾರಿ ಮಾಡಿದ ಅನ್ನಭಾಗ್ಯ ಯೋಜನೆಯಿಂದ ಕಡು ಬಡವರು, ಕೃಷಿ ಕೂಲಿಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಗೃಹ ಗೃಹಲಕ್ಷ್ಮಿ ಯೋಜನೆ ಜಾರಿಯಿಂದಾಗಿ ಮಹಿಳೆಯರಿಗೆ ಪ್ರತಿ ಮಾಹೆ 2000 ಸಿಗುತ್ತಿದೆ. ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳಿಗೆ ಮತ್ತು ಯುವನಿಧಿ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆ ಜಾರಿಯಿಂದಾಗಿ ವಿಜಯನಗರ ಜಿಲ್ಲೆಯ ಸಾರಿಗೆ ಇಲಾಖೆಯೊಂದಕ್ಕೇನೆ ಪ್ರತಿ ಮಾಹೆ ಕೋಟಿಗಟ್ಟಲೇ ಆದಾಯ ಬರುತ್ತಿದೆ. ಸಂಸ್ಥೆಯು ಮೊದಲಿಗಿಂತ ಹೆಚ್ಚಿನ ರೀತಿಯಲ್ಲಿ ಬಲವರ್ಧನೆಯಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸುತ್ತಾರೆ. ಶಕ್ತಿ ಯೋಜನೆ ಸಹ ಜನಪ್ರತಿಯ ಯೋಜನೆಯಾಗಿ ಜನ ಮೆಚ್ಚುಗೆ ಗಳಿಸಿದೆ ಎಂದು ಶಾಸಕರು ತಿಳಿಸಿದರು.