
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿಗೆ ಸಾಂಸ್ಕೃತಿಕ ನಗರಿ ಸಂಪೂರ್ಣವಾಗಿ ಸಜ್ಜಾಗಿದೆ. ರಾಮಕೃಷ್ಣ ಆಶ್ರಮದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯವಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ)ವನ್ನು ಪ್ರಧಾನಿಯವರು ಇಂದು ಉದ್ಘಾಟಿಸಲಿದ್ದಾರೆ.
1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿನಲ್ಲಿ ತಂಗಿದ್ದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಮತ್ತು ಚಿರಸ್ಥಾಯಿಯಾಗಿಸುವ ಉದ್ದೇಶದಿಂದ ಈ ಸ್ಮಾರಕವನ್ನು ಅತ್ಯಾಕರ್ಷಕವಾಗಿ ನಿರ್ಮಿಸಲಾಗಿದೆ. ಸ್ವಾಮೀಜಿಯವರ ಬೋಧನೆಗಳು ಹಾಗೂ ಆದರ್ಶಗಳ ಮೂಲಕ ಇಂದಿನ ಯುವಜನತೆಗೆ ಸ್ಪೂರ್ತಿ ತುಂಬುವುದು ಈ ಸ್ಮಾರಕದ ಮುಖ್ಯ ಧ್ಯೇಯವಾಗಿದೆ.
ಪ್ರಧಾನಿ ಮೋದಿ ಮಧ್ಯಾಹ್ನ 2.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ತೆರಳಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ರಾಮಕೃಷ್ಣ ಆಶ್ರಮ ಶಾಲೆಗೆ ಭೇಟಿ ನೀಡಿ, ಸಂಜೆ ವೇಳೆಗೆ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರಧಾನಿ ಮೋದಿಯವರ ಮೈಸೂರು ಭೇಟಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ, ಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಬಳಿಕ ಓವಲ್ ಮೈದಾನದಲ್ಲಿ ಪ್ರಧಾನಿಯನ್ನು ಸ್ವಾಗತಿಸಿ, ಉದ್ಘಾಟನಾ ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರೊಂದಿಗೆ ಭಾಗವಹಿಸಲಿದ್ದಾರೆ.




