ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಸಂಕಷ್ಟ ಇದೀಗ ಮತ್ತಷ್ಟು ಹೆಚ್ಚಾಗಿದ್ದು, ಲೈಂಗಿಕ ದೌರ್ಜನ್ಯದಡಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಮಹೇಶ್ ನಾಯ್ಕ್ ಎಂಬುವವರ ಪುತ್ರಿಯೇ ಕಮಲಾಕರ್ ಭಟ್ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾಳೆ.
ಬಾಲಕಿಯು ನೀಡಿದ ದೂರಿನನ್ವಯ, ಶಿವಮೊಗ್ಗದಲ್ಲಿರುವ ಕಮಲಾಕರ್ ಭಟ್ ನಿವಾಸದಲ್ಲಿದ್ದಾಗ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಬಾಲಕಿಯ ತಾಯಿ ಸುಚಿತ್ರಾ ಮನೆಯಲ್ಲಿ ಇಲ್ಲದ ಸಮಯವನ್ನು ಬಳಸಿಕೊಂಡು ಜ್ಯೋತಿಷಿ ಕಮಲಾಕರ್ ಭಟ್ ತನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಪ್ರಕರಣವನ್ನು ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಪ್ರಸ್ತುತ ಕಮಲಾಕರ್ ಭಟ್ ಕಾರವಾರದ ಜೈಲಿನಲ್ಲಿದ್ದು, ವಸಂತ್ ನಾಯ್ಕ್ ಹತ್ಯೆ ಪ್ರಕರಣದ ತನಿಖೆಗಾಗಿ ಸಿದ್ದಾಪುರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಈಗ ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಹೊಸದಾಗಿ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ಶೀಘ್ರದಲ್ಲೇ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯುವ ಸಾಧ್ಯತೆಗಳಿವೆ. ಹತ್ಯೆ ಪ್ರಕರಣದ ಬೆನ್ನಲ್ಲೇ ಈ ರೀತಿಯ ಗಂಭೀರ ಪ್ರಕರಣ ಬೆಳಕಿಗೆ ಬಂದಿರುವುದು ತನಿಖೆಗೆ ಹೊಸ ಆಯಾಮ ನೀಡಿದೆ.


