Top Newsರಾಜಕೀಯ

ಮಹಾರಾಷ್ಟ್ರದ ಆಲಮಟ್ಟಿ ತಕರಾರಿನ ಹಿಂದೆ ರಾಜಕೀಯ ದುರುದ್ದೇಶ; ಎಂ.ಬಿ ಪಾಟೀಲ್​ ಕಿಡಿ

ಬೆಂಗಳೂರು: ಕರ್ನಾಟಕವು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ಮಹಾರಾಷ್ಟ್ರದ ಆರೋಪದಲ್ಲಿ ಹುರುಳಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಲಮಟ್ಟಿ ಅಣೆಕಟ್ಟನ್ನು ನಾವು ಕಟ್ಟುವ ಮುಂಚೆಯೂ ಸಾಂಗ್ಲಿಯಲ್ಲಿ 1964, 1976, 1994 ಹಾಗೂ 1997ರಲ್ಲಿ ಭೀಕರ ಪ್ರವಾಹ ಸೃಷ್ಟಿಯಾಗಿತ್ತು. ಸುಪ್ರೀಂಕೋರ್ಟ್ ಸಹ ಅಣೆಕಟ್ಟೆಯ ಎತ್ತರವನ್ನು 524.256 ಮೀಟರ್​ಗೆ ಏರಿಸಬಹುದು ಎಂದು 2000ನೇ ಇಸವಿಯಲ್ಲೇ ಹೇಳಿದೆ. ಇದಾದ ಮೇಲೂ ಮಹಾರಾಷ್ಟ್ರ ನಮಗೆ ವಿರುದ್ಧವಾಗಿ 2005ರಲ್ಲಿ ನ್ಯಾಯಾಧೀಕರಣ ಮೊರೆ ಹೋಗಿದೆ. ಆದ್ರೆ ಅದರ ಮಧ್ಯಂತರ ಮನವಿಯು ತಿರಸ್ಕಾರಗೊಂಡಿದೆ ಎಂದ್ರು.

ಆಲಮಟ್ಟಿ ಅಣೆಕಟ್ಟೆ ಕಾರಣದಿಂದಾಗಿಯೇ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ವಾದವನ್ನು ನ್ಯಾಯಮಂಡಳಿಯು ಪುರಸ್ಕರಿಸಿಲ್ಲ. ಈ ಸಂಬಂಧವಾಗಿ ನ್ಯಾಯಾಧೀಕರಣವು 2010 ಮತ್ತು 2013ರಲ್ಲಿ ಕೂಡ ವಿಸ್ತೃತ ವರದಿ ನೀಡಿದೆ. ಈ ವಿಚಾರದಲ್ಲಿ ಅದು ಹಿಪ್ಪರಗಿ ಜಲಾಶಯವನ್ನೂ ಪರಿಗಣಿಸಿದೆ. ಜೊತೆಗೆ, ಕೃಷ್ಣಾ ನೀರು ಹಂಚಿಕೆ ಸಂಬಂಧ ರಚಿಸಲಾದ ಎರಡನೆಯ ನ್ಯಾಯಾಧೀಕರಣವು ನೀಡಿರುವ ತೀರ್ಪನ್ನು ಇದುವರೆಗೂ ಯಾವ ರಾಜ್ಯಗಳೂ ಪ್ರಶ್ನಿಸಿಲ್ಲ. ಹೀಗಿರುವಾಗ, ಈಗ ಇದ್ದಕ್ಕಿದ್ದಂತೆ ತಕರಾರು ತೆಗೆಯುವುದರ ಹಿಂದಿನ ಉದ್ದೇಶ ಯಾರಿಗಾದರೂ ಅರ್ಥವಾಗುತ್ತದೆ ಎಂದು ಟೀಕಿಸಿದರು.

Comments (0)

Your email address will not be published. Required fields are marked *

Back to top button