ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸದರು ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಲು ಪ್ರಧಾನಿಯವರು ಆಗಮಿಸುವ ವೇಳೆ ನಡೆದ ಈ ಘಟನೆಯು ಅತ್ಯಂತ ಆಘಾತಕಾರಿ ಮತ್ತು ಪ್ರಚೋದನಕಾರಿಯಾಗಿದೆ ಎಂದು ಕಿಡಿ ಕಾರಿದ್ದಾರೆ. ವಿರೋಧ ಪಕ್ಷದ ಸಂಸದರು ಸದನದ ಎಲ್ಲಾ ಮಿತಿಗಳನ್ನು ಮೀರಿ ವರ್ತಿಸುತ್ತಿದ್ದು, ಈ ರೀತಿಯ ಕೆಳಮಟ್ಟದ ರಾಜಕೀಯವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ. ಒಬ್ಬ ಸಂಸದರಾಗಿ ಸದನದ ಘನತೆಯನ್ನು ಕಾಪಾಡುವುದು ಪ್ರಮುಖ ಕರ್ತವ್ಯವಾಗಿದ್ದರೂ, ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿ ಗದ್ದಲ ಸೃಷ್ಟಿಸಿ ಅಶಿಸ್ತು ತೋರುತ್ತಿದ್ದಾರೆ ಎಂದು ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭಾರತ-ಅಮೆರಿಕ ವಾಣಿಜ್ಯ ಒಪ್ಪಂದವನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಅವರು, ಅಂತರಾಷ್ಟ್ರೀಯ ಒಪ್ಪಂದಗಳ ಬಗ್ಗೆ ಮಾತನಾಡುವ ಮೊದಲು ರಾಜ್ಯದ ಖಜಾನೆಯನ್ನು ಯಾಕೆ ಖಾಲಿ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಒಂದು ಕಾಲದಲ್ಲಿ ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕದ ಸಂಪತ್ತನ್ನು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಬರಿದು ಮಾಡಿದ್ದು, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ ಮತ್ತು ಹೂಡಿಕೆದಾರರು ರಾಜ್ಯದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಿಂತ ಅಲ್ಪಾವಧಿಯ ರಾಜಕೀಯವೇ ಕಾಂಗ್ರೆಸ್ಗೆ ಮುಖ್ಯವಾಗಿದೆ ಎಂಬುದು ಅವರ ಆರೋಪವಾಗಿದೆ.
ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ನೆನಪಿಸಿದ ಸಚಿವರು, 2008ರ ಮುಂಬೈ ದಾಳಿಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜತಾಂತ್ರಿಕ ಒತ್ತಡಕ್ಕೆ ಮಣಿದು ಮೌನವಾಗಿತ್ತು ಎಂದು ಚಾಟಿ ಬೀಸಿದ್ದಾರೆ. ಅಲ್ಲದೆ, 2020ರಲ್ಲಿ ಗಡಿಯಲ್ಲಿ ಸೈನಿಕರು ಚೀನಾದ ಆಕ್ರಮಣವನ್ನು ಎದುರಿಸುತ್ತಿದ್ದಾಗ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರು ಚೀನಾ ಅಧಿಕಾರಿಗಳೊಂದಿಗೆ ರಹಸ್ಯ ಸಭೆಗಳನ್ನು ನಡೆಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಭಾರತದ ವಿದೇಶಾಂಗ ನೀತಿಗಳು ನಿಷ್ಕ್ರಿಯವಾಗಿದ್ದವು ಮತ್ತು ಜಾಗತಿಕ ಮಟ್ಟದಲ್ಲಿ ದೇಶದ ಸ್ಥಾನಮಾನಕ್ಕೆ ಧಕ್ಕೆಯಾಗಿತ್ತು. ಆದರೆ ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ಇಂದು ಜಾಗತಿಕವಾಗಿ ಅತ್ಯಂತ ದೃಢವಾಗಿ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ, ಇದನ್ನು ಅರಿಯದ ಕಾಂಗ್ರೆಸ್ ನಾಯಕರು ಅಸಂಬದ್ಧವಾಗಿ ಬಡಬಡಿಸುವುದನ್ನು ನಿಲ್ಲಿಸಬೇಕು ಎಂದು ಪ್ರಹ್ಲಾದ್ ಜೋಶಿ ತೀಕ್ಷ್ಣವಾಗಿ ಹೇಳಿದ್ದಾರೆ.


