ಬೆಂಗಳೂರು : ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಸ್ವಾಮಿ ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್, ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.