ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.ಮಂಡ್ಯ ಜಿಲ್ಲೆಗೆ ಗುರುವಾರ ಭೇಟಿ ನೀಡಿದ ಅವರು ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ನಾಗಮಂಗಲದಲ್ಲಿ ನಡೆದ ಘಟನೆಗಳನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ಗೆ ಪೆಟ್ರೋಲ್ ಬಾಂಬ್ ಕೂಡ ಒಂದು ಸಣ್ಣ ಘಟನೆಯಾಗಿದೆ. ಬಹುಶಃ ಅವರಿಗೆ ಕ್ಷಿಪಣಿ ಅಥವಾ ರಾಕೆಟ್ ಒಂದು ದೊಡ್ಡ ಘಟನೆಯಂತೆ ಕಾಣಿಸಬಹುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಇಂತಹ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದ ಅಶೋಕ್, ನಾಗಮಂಗಲ ಘಟನೆ ಪೂರ್ವಯೋಜಿತ ಎಂದು ಕಿಡಿಕಾರಿದರು. ಇದೇ ವೇಳೆ ಕಳೆದ ವರ್ಷದ ನಡೆದ ಘಟನೆಯನ್ನು ಅಶೋಕ ಸ್ಮರಿಸಿದ್ದು, ಅಧಿಕಾರಿಗಳು ಹಾಗೂ ಪೊಲೀಸರ ಸನ್ನದ್ಧತೆ ಕುರಿತು ಪ್ರಶ್ನಿಸಿದರು.ಭಯೋತ್ಪಾದನ ಕೃತ್ಯವು ಈ ರೀತಿ ನಡೆಯಲ್ಲ. ಕಾನೂನನ್ನು ಕೈಗೆತ್ತುಕೊಂಡಿದ್ದಾರೆ. ಕಳೆದ ಬಾರಿಯೂ ಗಣಪತಿ ವಿಚಾರಕ್ಕೆ ಗಲಾಟೆಯಾಗಿದೆ. ಅಧಿಕಾರಿಗಳಿಗೆ, ಪೊಲೀಸರಿಗೆ ಅಷ್ಟೂ ಪರಿಜ್ಞಾನವು ಇಲ್ವಾ. ಕತ್ತೆ ಕಾಯ್ತಿದ್ರಾ ಪೊಲೀಸರು? ಎಂದು ಮೈಸೂರಿನಲ್ಲಿ ವಾಗ್ದಾಳಿ ನಡೆಸಿದರು.