ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ.
ಆ.15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೋಯರ ಪಾಲಿಗೆ ಅತ್ಯಂತ ಮಹತ್ವ ದಿನ. ಈ ಬಾರಿ ಭಾರತ 76ನೇ ಗಣರಾಜ್ಯೋತ್ಸವ ದಿನವನ್ನು ಜನವರಿ 26ನೇ ಭಾನುವಾರ ಆಚರಿಸುತ್ತಿದೆ. ಈ ಬಾರಿಯ ವಿಶೇಷತೆಗಳೇನು? ಯಾಕೆ ಗಣರಾಜ್ಯೋತ್ಸವವನ್ನು ಜ.26ರಂದೇ ಆಚರಿಸುತ್ತಾರೆ ಎಂಬ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಈ ವರ್ಷದ ಗಣರಾಜ್ಯೋತ್ಸವ ಆಚರಣೆಯು ಸುವರ್ಣ ಭಾರತ ಪರಂಪರೆ ಮತ್ತು ಪ್ರಗತಿ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದೆ. ಪ್ರತಿ ವರ್ಷ ಭಾರತ ಸರ್ಕಾರವು ಗಣರಾಜ್ಯೋತ್ಸವಕ್ಕಾಗಿ ಒಂದು ನಿರ್ದಿಷ್ಟ ವಿಷಯವನ್ನು ಆಯ್ಕೆ ಮಾಡುತ್ತದೆ. ಈ ವರ್ಷದ ವಿಷಯವು ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಅದರ ಬೆಳವಣಿಗೆ ಮತ್ತು ಅಭಿವೃದ್ಧಿಯ ಪ್ರಮಾಣವನ್ನು ಎತ್ತಿ ತೋರಿಸುತ್ತದೆ.
2025ರ ಗಣರಾಜ್ಯೋತ್ಸವಕ್ಕೆ ಆಂಧ್ರಪ್ರದೇಶ, ಬಿಹಾರ, ಚಂಡೀಗಢ, ಗೋವಾ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ ಮತ್ತು ಮಧ್ಯಪ್ರದೇಶ ಸೇರಿದಂತೆ 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಟ್ಯಾಬ್ಲೋಗಳು ಕರ್ತವ್ಯ ಪಥ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿವೆ. ಹೆಚ್ಚುವರಿಯಾಗಿ, 11 ಕೇಂದ್ರ ಸರ್ಕಾರಿ ತುಕಡಿಗಳು ಈ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.