#Exclusive NewsTop Newsಜಿಲ್ಲೆರಾಜಕೀಯರಾಜ್ಯಸುದ್ದಿ

ರೇವಣ್ಣಗೆ ತಪ್ಪದ ಸಂಕಷ್ಟ; ತನಿಖೆಗೆ ಗ್ರೀನ್ ಸಿಗ್ನಲ್ ತೋರಿಸಿದ ಹೈಕೋರ್ಟ್

ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠವು, ರೇವಣ್ಣ ವಿರುದ್ಧದ ದೋಷಾರೋಪ ಪ್ರಕ್ರಿಯೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಡಿಯೋಗಳು ಹೊರಬಂದ ಸಂದರ್ಭದಲ್ಲಿ, ಸಂತ್ರಸ್ತ ಮಹಿಳೆಯೊಬ್ಬರನ್ನು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಅಪಹರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಸಂತ್ರಸ್ತೆಯ ಮಗ ನೀಡಿದ್ದ ದೂರಿನ ಆಧಾರದ ಮೇಲೆ ವಿಶೇಷ ತನಿಖಾ ದಳ ರೇವಣ್ಣ ಅವರನ್ನು ಬಂಧಿಸಿತ್ತು. ಈ ಪ್ರಕರಣದ ತನಿಖೆ ಮುಂದುವರಿದಿರುವ ಬೆನ್ನಲ್ಲೇ, ಪ್ರಕರಣವನ್ನೇ ರದ್ದು ಮಾಡುವಂತೆ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇತ್ತೀಚಿನ ವಿಚಾರಣೆ ವೇಳೆ ರೇವಣ್ಣ ಪರ ವಕೀಲರು ವಾದ ಮಂಡನೆಗೆ ಹೆಚ್ಚಿನ ಸಮಯಾವಕಾಶ ಕೋರಿದ್ದರು. ತಮ್ಮ ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆ ಎಂಬ ಕಾರಣ ನೀಡಿ ವಿಚಾರಣೆ ಮುಂದೂಡಲು ಮನವಿ ಮಾಡಿದ್ದರು. ಆದರೆ ಈ ಮನವಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೂಡಲೇ ತೆರವು ಮಾಡಿತು. ಈ ಆದೇಶದ ಬೆನ್ನಲ್ಲೇ ರೇವಣ್ಣ ವಿರುದ್ಧ ಕೆಳ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿ ವಿಚಾರಣೆ ನಡೆಸಲು ಎಸ್‌ಐಟಿಗೆ ಇದ್ದ ತಾಂತ್ರಿಕ ಅಡೆತಡೆಗಳು ದೂರವಾಗಿವೆ.

Comments (0)

Your email address will not be published. Required fields are marked *

Back to top button