ಕ್ರೈಂ ಸ್ಟೋರಿ

ಯುಗಾದಿ ದಿನವೇ ರೌಡಿಶೀಟರ್​ ನೇಪಾಳಿ ಮಂಜನ ಬರ್ಬರ ಕೊಲೆ

ಆನೇಕಲ್: ಯುಗಾದಿ ಹಬ್ಬದ ದಿನವೇ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿದೆ.

ಹತ್ಯೆಯಾದ ರೌಡಿಶೀಟರ್‌ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ. ಎರಡು ಬೈಕ್‍ನಲ್ಲಿ ಬಂದ ಹಂತಕರ ಪಡೆ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದೆ.

ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಕೊಲೆಯಾದ ನೇಪಾಳಿ ಮಂಜ ರೌಡಿಸಂ ಸಹವಾಸ ಬೇಡ ಎಂದು ಇತ್ತೀಚೆಗೆ ಕುಟುಂಬ ಸಮೇತ ದೂರದ ಕುಣಿಗಲ್‍ಗೆ ಶಿಫ್ಟ್ ಆಗಿದ್ದ. ಯುಗಾದಿ ಹಬ್ಬ ಹಿನ್ನೆಲೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಲು ಊರಿಗೆ ಬಂದಿದ್ದು, ರಾತ್ರಿ 10:45 ರ ಸುಮಾರಿಗೆ ಕೊಲೆ ನಡೆದಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಶಂಕೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ತಿಳಿಸಿದ್ದಾರೆ.

ಎರಡು ಕೊಲೆ ಸೇರಿದಂತೆ ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೃತ ನೇಪಾಳಿ ಮಂಜ ಪ್ರಮುಖ ಆರೋಪಿಯಾಗಿದ್ದ. ಎರಡು ಬಾರಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿತ್ತು. ಕಳೆದ ಚುನಾವಣೆ ವೇಳೆ ಗಡಿಪಾರು ಕೂಡ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button