ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ..
ಇಂದು ಗೃಹ ಸಚಿವ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲು ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತು ಮಾಡಲಾಗಿದೆ.. ಈ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವ ಪರಮೇಶ್ವರ್ ಅವರು ಆದೇಶಿಸಿದ್ದಾರೆ..
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ 5,000 ಕೈದಿಗಳಿದ್ದು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಒಟ್ಟಿಗೆ ಇರುತ್ತಾರೆ. ಹೀಗಾಗಿ ಜೈಲುಗಳ ಮೇಲೆ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, 15 ದಿನದೊಳಗೆ ಇದು ಕಾರ್ಯನಿರ್ವಹಿಸಲಿದೆ. ಇನ್ಮುಂದೆ ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
5 ವರ್ಷಗಳ ನಂತರ ಜೈಲಿನ ಅಧಿಕಾರಿಗಳ ವರ್ಗಾವಣೆ ಕಡ್ಡಾಯವಾಗಲಿದ್ದು, ದೀರ್ಘಕಾಲ ಒಂದೇ ಕಡೆ ಕೆಲಸ ಮಾಡಿದರೆ ಬೇರು ಬಿಡುತ್ತಾರೆ. ಅವರು ಪ್ರಭಾವ ಬೀರುವ ಸಾಧ್ಯತೆ ಹಿನ್ನಲೆ ಅಂತವರನ್ನು ಬೇರೆಡೆಗೆ ವರ್ಗಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದ್ದು, ಕೆಪಿಎಸ್ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ಸಹಾಯಕ ಅಧೀಕ್ಷಕರು ಸೇರಿದಂತೆ 1,000 ಸಿಬ್ಬಂದಿ ನೇಮಕ ಮಾಡಲು ಉದ್ದೇಶಿಸಲಾಗಿದ್ದು, ಸಿಬ್ಬಂದಿ ಕೊರತೆ ನೀಗಿಸಿದರೆ ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಬಹುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.


