ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತಷ್ಟು ಆಕ್ರಮಣಕಾರಿಯಾಗಿದೆ. ಬಿಜೆಪಿ ನಾಯಕ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದು, ದರ ಏರಿಕೆ ಕುರಿತು ಸಿಎಂ ಸುಳ್ಳು ಹೇಳುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಸುಳ್ಳು ಮತ್ತು ಸಿದ್ದರಾಮಯ್ಯ ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಲೇವಡಿ ಮಾಡಿರುವ ಸಿ.ಟಿ. ರವಿ, ಸಿಎಂ ಅವರ ದಿನಚರಿ ಸುಳ್ಳಿನಿಂದಲೇ ಆರಂಭವಾಗಿ ಸುಳ್ಳಿನಲ್ಲೇ ಅಂತ್ಯವಾಗುತ್ತದೆ ಎಂದು ಕಿಡಿಕಾರಿದ್ದಾರೆ. ಮೆಟ್ರೋ ಲಾಭದಲ್ಲಿ ರಾಜ್ಯ ಸರ್ಕಾರಕ್ಕೆ ಪಾಲಿದೆ ಎಂದ ಮೇಲೆ, ಅದರ ದರ ಏರಿಕೆಯ ಜವಾಬ್ದಾರಿಯೂ ಸರ್ಕಾರದ್ದೇ ಆಗಿರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈಗಾಗಲೇ ಸಂಸದ ಪಿ.ಸಿ. ಮೋಹನ್ ಅವರು ಈ ಕುರಿತು ವಿಸ್ತೃತ ಪತ್ರ ಬರೆದಿದ್ದು, ಕೇಂದ್ರದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಮಿತಿ ಅಧ್ಯಕ್ಷರ ನೇಮಕ ಹಾಗೂ ಶಿಫಾರಸುಗಳ ಹಿಂದೆ ರಾಜ್ಯದ ಪ್ರಭಾವವಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೂಡಲೇ ಈ ದರ ಏರಿಕೆಯನ್ನು ಹಿಂಪಡೆಯದಿದ್ದರೆ ಬಿಜೆಪಿ ವತಿಯಿಂದ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


