
ಕರ್ನಾಟಕದಲ್ಲಿ ಬಜೆಟ್ ಅಧಿವೇಶನದ ಕಾವು ಏರಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಇತಿಹಾಸದಲ್ಲೇ ದಾಖಲೆಯ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಆದರೆ ಬಜೆಟ್ ಮಂಡನೆಗೆ ಮೊದಲೇ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ತಾರಕಕ್ಕೇರಿದೆ. ಸರ್ಕಾರದ ಆರ್ಥಿಕ ಶಿಸ್ತಿನ ಬಗ್ಗೆ ವಿರೋಧ ಪಕ್ಷದ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಬಜೆಟ್ ಮೇಲಿನ ನಿರೀಕ್ಷೆಗಳಿಗಿಂತ ಟೀಕೆಗಳೇ ಹೆಚ್ಚಾಗಿ ಕೇಳಿಬರುತ್ತಿವೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿ. “ಬಜೆಟ್ನಲ್ಲಿ ತೆರಿಗೆ ಏರಿಸುವ ಸಾಧ್ಯತೆ ಕಡಿಮೆ ಇರಬಹುದು, ಏಕೆಂದರೆ ಸರ್ಕಾರ ವರ್ಷಪೂರ್ತಿ ತಿಂಗಳಿಗೆ ನಾಲ್ಕು ಬಾರಿ ತೆರಿಗೆ ಹಾಕುವ ಕೆಲಸ ಮಾಡುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರ ಬೇಕಾಬಿಟ್ಟಿ ಸಾಲ ಮಾಡಿ ಈಗ ಸಂಪೂರ್ಣ ದಿವಾಳಿಯಾಗಿದೆ. ಆರ್ಥಿಕ ಶಿಸ್ತು ಕಾಪಾಡಿದ್ದೇವೆ ಎಂದು ಸುಳ್ಳು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಶೋಕ್ ಗಂಭೀರವಾಗಿ ಆರೋಪಿಸಿದ್ದಾರೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಬಲಿಕೊಡಲಾಗುತ್ತಿದೆ ಮತ್ತು ರಾಜ್ಯದ ಖಜಾನೆ ಖಾಲಿಯಾಗಿದೆ ಸಾಲದ ಹೊರೆ ಹೆಚ್ಚುತ್ತಿರುವುದು ರಾಜ್ಯದ ಭವಿಷ್ಯಕ್ಕೆ ಮಾರಕ ಎಂದು ವಿಪಕ್ಷಗಳು ಒಕ್ಕೊರಲಿನಿಂದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.




