ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗೆ ಅವಮಾನ ಮಾಡುತ್ತಿರುವುದು ವಿಷಾದನೀಯ ಸಂಗತಿ ಮತ್ತು ಬೆಳವಣಿಗೆ ಎಂದು ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವದ ದಿನ. “ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು ಮಾತ್ರ. ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ ಎಂದ್ರು ಸಿದ್ದರಾಮಯ್ಯ.
ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.