Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsSM Krishna: ಮಾಜಿ ಸಿಎಂ ಎಸ್​​ ಎಂ ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ...

SM Krishna: ಮಾಜಿ ಸಿಎಂ ಎಸ್​​ ಎಂ ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ ಸಂತಾಪ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಅಪಾರ. ಅವರ ಸಾಧನೆಗಳು ಮತ್ತು ನಾಯಕತ್ವ ಗುಣಗಳು ಯುವ ರಾಜಕಾರಣಿಗಳಿಗೆ ಮಾದರಿಯಾಗಿವೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು, ಡಿಸೆಂಬರ್​​ 10: ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್​​. ಎಂ. ಕೃಷ್ಣ (92) (SM Krishna) ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. “ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಂತಾಪ ಸೂಚಿಸಿದ್ದಾರೆ.

“ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ” ಎಂದು ಟ್ವಿಟ್​ ಮಾಡಿದ್ದಾರೆ.

ಸಭಾಪತಿ ಯುಟಿ ಖಾದರ್ ಸಂತಾಪ

“ಎಸ್​.ಎಂ.ಕೃಷ್ಣ ನಿಧನದ ವಿಚಾರ ತಿಳಿದು ತುಂಬಾ ದುಃಖವಾಗಿದೆ. ಎಸ್​.ಎಂ.ಕೃಷ್ಣ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಎಸ್​.ಎಂ.ಕೃಷ್ಣ ಅಜಾತಶತ್ರು, ಉತ್ತಮ ರಾಜಕಾರಣಿ ಆಗಿದ್ದರು. ಸಿಎಂ ಆಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದರು. ಬೆಂಗಳೂರು ಅಭಿವೃದ್ಧಿಗೆ ಶ್ರಮಿಸಿದ್ದರು, ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಎಸ್​.ಎಂ.ಕೃಷ್ಣ ಅವರು ರಾಜಕಾರಣದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ನಾನು ವಿದ್ಯಾರ್ಥಿಯಾಗಿದ್ದಾಗಲೇ ಎಸ್​.ಎಂ.ಕೃಷ್ಣ ಜೊತೆ ಸಂಪರ್ಕ ಇತ್ತು” ಎಂದು ಸಂತಾಪ ಸೂಚಿಸಿದ್ದಾರೆ. “ಎಸ್​.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದೆ. ಎಸ್​.ಎಂ.ಕೃಷ್ಣ ಅವರ ಸಾಧನೆ ಯುವ ರಾಜಕಾರಣಿಗಳಿಗೆ ಸ್ಫೂರ್ತಿದಾಯಕವಾಗಿದೆ. ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಸಚಿವ ಡಾ.ಜಿ.ಪರಮೇಶ್ವರ್ ಸಂತಾಪ

“ಎಸ್​.ಎಂ.ಕೃಷ್ಣ ನಿಧನ ವಿಚಾರ ಕೇಳಿ ತುಂಬಾ ನೋವಾಗಿದೆ. ಉತ್ತಮ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ಸಿಎಂ ಆಗಿ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಸ್ಥಾಪನೆಗೆ ಕಾರಣರಾಗಿದ್ದರು. ಅವರಿಂದ ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಹಲವು ಯೋಜನೆಗಳ ಜೊತೆ ಹಲವು ಸವಾಲುಗಳನ್ನು ಎದುರಿಸಿದ್ದರು. ರಾಜ್​ಕುಮಾರ್ ಅಪಹರಣ ಸಮಯದಲ್ಲಿ ಸಮರ್ಥವಾಗಿ ನಿಭಾಯಿಸಿದ್ದರು. ಕಾವೇರಿ ನದಿ ನೀರು ವಿಚಾರದಲ್ಲೂ ಸಮರ್ಥವಾಗಿ ಕೆಲಸ ಮಾಡಿದ್ದರು. ಎಸ್​​​ಎಂಕೆ ಅವರ ಸಾಧನೆ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ. ಎಸ್​.ಎಂ.ಕೃಷ್ಣ ಅವರ ಜೊತೆ ಉತ್ತಮ ಒಡನಾಡ ಇತ್ತು ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ. ಎಸ್​​.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಗೃಹ ಸಚಿವ ಜಿ ಪರಮೇಶ್ವರ್​ ಸಂತಾಪ ಸೂಚಿಸಿದ್ದಾರೆ.

“ಎಸ್ಎಂ ಕೃಷ್ಣ ಅವರು ನಮ್ಮನ್ನು ಅಗಲಿದ್ದಾರೆ, ಇದು ಬಹಳ ನೋವಿನ ಸಂಗತಿ. ರಾಜ್ಯಕ್ಕೆ ಎಸ್​​.ಎಂ.ಕೃಷ್ಣ ಅವರ ಕೊಡುಗೆ ಅಪಾರವಾಗಿದೆ. ಸಿಎಂ, ವಿತ್ತ ಸಚಿವರಾಗಿ ಉತ್ತರ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾಗಿದೆ. ಹಲವು ಬಾರಿ ಎಸ್​.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಂಬನಿ ಮಿಡಿದಿದ್ದಾರೆ.

ಮಾಜಿ ಸಭಾಪತಿ ಬಿ.ಎಲ್​.ಶಂಕರ್ ಸಂತಾಪ

“ಎಸ್​.ಎಂ.ಕೃಷ್ಣ ನಿಧನದ ವಿಚಾರ ತಿಳಿದು ತುಂಬಾ ನೋವುಂಟಾಗಿದೆ. ಎಸ್​​.ಎಂ.ಕೃಷ್ಣ ಅವರು ಸುಧೀರ್ಘ ಕಾಲ ರಾಜಕಾರಣದಲ್ಲಿ ಇದ್ದರು. ಉತ್ತಮ ಸುಸಂಸ್ಕೃತ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಎಸ್​.ಎಂ.ಕೃಷ್ಣ ಅವರು ಬೆಂಗಳೂರು ನಗರ ಅಭಿವೃದ್ಧಿಗೆ ಶ್ರಮಿಸಿದ್ದರು. ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದರು” ಎಂದು ಮಾಜಿ ಸಭಾಪತಿ ಬಿಎಲ್​ ಶಂಕರ್ ಸಂತಾಪ ಸೂಚಿಸಿದ್ದಾರೆ.

ಎಂಎಲ್​ಸಿ ಹೆಚ್​​.ವಿಶ್ವನಾಥ್​​ ಸಂತಾಪ

“ಎಸ್​.ಎಂ.ಕೃಷ್ಣ ನಿಧನ ವಿಚಾರ ತಿಳಿದು ತುಂಬಾ ನೋವುಂಟಾಗಿದೆ. ಎಸ್​​.ಎಂ.ಕೃಷ್ಣ ಸಿಎಂ ಆಗಿ ಹಲವು ಮಹತ್ವದ ಯೋಜನೆಗಳು ಜಾರಿ ತಂದಿದ್ದರು. ರಾಜ್​​ಕುಮಾರ್ ಅಪಹರಣ ಸಂದರ್ಭದಲ್ಲಿ ಸಮರ್ಥವಾಗಿ ನಿಭಾಯಿಸಿದ್ದರು. ಐಟಿ-ಬಿಟಿ, ಮೆಟ್ರೋ ರೈಲು, ಕೆಂಪೇಗೌಡ ಏರ್​ಪೋರ್ಟ್​ ಸ್ಥಾಪನೆ ಮಾಡಿದ್ದಾರೆ. ಬಿಸಿಯೂಟ ಯೋಜನೆ, ಮಹಿಳಾ ಸ್ವಸಹಾಯ ಸಂಘಟನೆಗೆ ನೆರವು ನೀಡಿದ್ದರು. ಕೇಂದ್ರದಲ್ಲೂ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು. ಎಸ್​.ಎಂ.ಕೃಷ್ಣ ಅವರು ನನಗೂ ಸೇರಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಎಸ್​​ಎಂ ಕೃಷ್ಣ ಅವರ ಕೆಲಸಗಳು ಯುವ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿದೆ. ಎಸ್​​.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ” ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ” ಎಂದು ಕಂಬಿನಿ ಮಿಡಿದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments