ಬೀದರ್: ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ತಳ್ಳಿ ಮಲತಾಯಿ ಜೀವ ತೆಗೆದಿರುವ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
7 ವರ್ಷದ ಶಾನವಿ ಮೃತ ಬಾಲಕಿ. ಆ.27ರಂದು ಆರೋಪಿ ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದೊಯ್ದಿದ್ದಳು. ಈ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಆ ದಿನ ಎಲ್ಲರೂ ಸಾನ್ವಿ ಆಯತಪ್ಪಿ ಬಿದ್ದಳು ಎಂದು ನಂಬಿದ್ದರು. ಆ.28ರಂದು ಮೃತ ಬಾಲಕಿ ತಂದೆ ಸಿದ್ಧಾಂತ ಗಾಂಧಿಗಂಜ್ ಠಾಣೆಯಲ್ಲಿ ಆಕಸ್ಮಿಕ ಸಾವು ದೂರು ನೀಡಿದ್ದರು.
ಆದರೆ ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದೆ. ರಾಧಾ ಬಾಲಕಿ ಜೊತೆ ಟೇರಸ್ ಮೇಲೆ ಅನುಮಾನಾಸ್ಪದವಾಗಿ ಓಡಾಡುವ ದೃಶ ಸೆರೆಯಾಗಿತ್ತು. ಈ ಸಿಸಿಟಿವಿ ದೃಶ್ಯ ನೋಡಿದಾಗ ವಿಷಯ ಬಹಿರಂಗವಾಗಿದ್ದು, ವಿಡಿಯೋ ಆಧರಿಸಿ ಬಾಲಕಿಯ ಅಜ್ಜಿ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ಶಾನವಿ ತಾಯಿ ಖಾಯಿಲೆಗೆ ತುತ್ತಾಗಿ 6 ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಬಳಿಕ 2023ರಲ್ಲಿ ರಾಧಾ ಜೊತೆ ಸಿದ್ಧಾಂತ ಎರಡನೇ ವಿವಾಹವಾಗಿದ್ದು, ಅವರಿಗೆ ಎರಡು ಅವಳಿ ಮಕ್ಕಳಿವೆ. ಹೀಗಾಗಿ ಸಿದ್ಧಾಂತನ ಮೊದಲ ಮಗುವನ್ನು ಎರಡನೇ ಪತ್ನಿ ರಾಧಾ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿದ್ದಾರೆ. ವಿಚಾರಣೆಗೊಳಪಡಿಸಿದಾಗ ಆಸ್ತಿ ಇಬ್ಭಾಗ ಆಗುತ್ತದೆ ಎಂದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.


