ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇರುವುದು ನಿಜ, ಆದ್ರೆ ಯಾವುದೇ ರಾಜಕೀಯ ಪಕ್ಷದಲ್ಲಿ ಈ ವ್ಯವಸ್ಥೆಯಿಲ್ಲ. ವ್ಯವಸ್ಥಿತವಾಗಿ ಸಂಘಟನೆ ಚುನಾವಣೆ ನಡೆಯುತ್ತದೆ ಎಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯಾಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದಲ್ಲಿ ವರಿಷ್ಠರು ಏನು ನಿರ್ಧಾರ ಮಾಡುತ್ತಾರೆ ಅವೂ ಎಲ್ಲವೂ ನಡೆಯುತ್ತಿದೆ ಎಂದ್ರು.
ಯತ್ನಾಳ್ ಬಣದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂದರು.
ನಾನು ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಪಕ್ಷದ ಹಿತಕ್ಕಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಸಹ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಭರವಸೆ ವ್ಯಕ್ತಪಡಿಸಿದರು.