ಸೇಲಂ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸೇಲಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಯಾವುದೇ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ. ಈ ಮೂಲಕ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ವಿಜಯ್, ಹಳೆಯ ರಾಜಕೀಯ ಸಮೀಕರಣಗಳಿಂದ ದೂರವಿರುವ ಸೂಚನೆ ನೀಡಿದ್ದಾರೆ.

ಪ್ರಮುಖವಾಗಿ ದೇಶದ ದೊಡ್ಡ ಒಕ್ಕೂಟಗಳಾದ ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಜೊತೆ ಯಾವುದೇ ರೀತಿಯ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡು ಜನತೆ ತಮ್ಮ ಪಕ್ಷದ ಮೇಲೆ ವಿಶ್ವಾಸವಿರಿಸಲಿದ್ದಾರೆ ಮತ್ತು ಯಾರ ಹಂಗೂ ಇಲ್ಲದೆ ಸ್ವಂತ ಬಲದ ಮೇಲೆ ಪಕ್ಷವು ಸಂಪೂರ್ಣ ಬಹುಮತ ಪಡೆಯಲಿದೆ ಎಂಬ ದೃಢ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ತಮ್ಮ ಪಕ್ಷವೇ ಸರ್ಕಾರ ರಚಿಸಲಿದೆ ಎಂಬ ಭರವಸೆಯ ಮಾತುಗಳನ್ನು ವಿಜಯ್ ಆಡಿದ್ದಾರೆ.

ರಾಜ್ಯದ ಪ್ರಮುಖ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿನ ನಡುವೆ, ವಿಜಯ್ ಅವರ ಈ ‘ಏಕಾಂಗಿ ಹೋರಾಟ’ದ ನಿರ್ಧಾರವು ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಕುತೂಹಲದ ಘಟ್ಟಕ್ಕೆ ತಲುಪಿಸಿದೆ. ಕೇವಲ ಸಿನಿಮಾ ನಟನಾಗಿ ಉಳಿಯದೆ ಪೂರ್ಣ ಪ್ರಮಾಣದ ರಾಜಕಾರಣಿಯಾಗಿ ಹೊರಹೊಮ್ಮುತ್ತಿರುವ ವಿಜಯ್, ತಮ್ಮದೇ ಆದ ಸಿದ್ಧಾಂತಗಳ ಮೇಲೆ ಅಧಿಕಾರ ಹಿಡಿಯುವ ಮಹದಾಸೆ ಹೊಂದಿದ್ದಾರೆ. ಇದು ಅಲ್ಲಿನ ಯುವ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಕುತೂಹಲಕ್ಕೆ ಕಾರಣವಾಗಿದೆ.


