ಬೆಂಗಳೂರು: ಬರುವ ಡಿಸೆಂಬರ್ನಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕಾಂಗ್ರೆಸ್ ಅಧಿವೇಶನ ಹಾಗೂ ಚಳಿಗಾಲದ ಅಧಿವೇಶನಗಳ ದಿನಾಂಕಗಳು ಪರಸ್ಪರ ಒಂದಕ್ಕೊಂದು ಅಡ್ಡಿಯಾಗುವ ಸಾಧ್ಯತೆ ಇದ್ದು, ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಈಗ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ರಾಜ್ಯದಲ್ಲಿ ಪ್ರಸ್ತುತ ಅಕ್ಟೋಬರ್-ನವೆಂಬರ್ ತಿಂಗಳಿಡೀ ಉಪಚುನಾವಣೆಯ ಕಾವು ಏರಲಿದ್ದು, ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯುವುದಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಈ ಬಗ್ಗೆ ಸಮಾಲೋಚನೆ ನಡೆಸಿದ್ದು, ಎಲ್ಲವನ್ನೂ ಪರಿಗಣಿಸಿ ಚಳಿಗಾಲದ ಅಧಿವೇಶನ ನಿಗದಿಪಡಿಸುವಂತೆ ಕೋರಿದ್ದಾರೆ.
ಮಂಡ್ಯ ಸಾಹಿತ್ಯ ಸಮ್ಮೇಳನದ ತಯಾರಿ ಹಾಗೂ ಸಮ್ಮೇಳನದ ಸಂದರ್ಭದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳೆಲ್ಲರೂ ಇರಲೇಬೇಕಾಗುತ್ತದೆ. ಅದೇ ಸಂದರ್ಭದಲ್ಲಿ ಅಧಿವೇಶನವೂ ಇದ್ದರೆ ಕಷ್ಟವಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.