ಬೆಂಗಳೂರು: ಕಫ್ ಸಿರಪ್ ದುರಂತ ಸಂಭವಿಸಿದ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.. ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಾಸನದ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಅವರು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೇರಿ ಸೇರಿ ಹಲವು ರಾಜ್ಯಗಳಲ್ಲಿ ಔಷಧ ಕಲಬೆರಕೆಯಂಥ ಪ್ರಕರಣಗಳ ಮಾಹಿತಿ ವಿನಿಮಯಕ್ಕೆ ಪ್ರತ್ಯೇಕ ವೆಬ್ಸೈಟ್ ರಚಿಸುವಂತೆ ಈ ಹಿಂದೆಯೇ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಳಪೆ ಕಫ್ ಸಿರಪ್ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಫ್ ಸಿರಪ್ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಫ್ ಸಿರಫ್ಗಳ ಟೆಸ್ಟ್ಗೆ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲೂ ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಸಚಿವರು ತಿಳಿಸಿದರು.
ಕಫ್ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.


