
ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ವಾಪಸ್ ಪಡೆಯುವ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ಕಲಾಮಂದಿರದಲ್ಲಿ ಪ.ಮಲ್ಲೇಶ್-90 ಸ್ಮರಣಾರ್ಥ ನಡೆದ ವಿಚಾರಸಂಕೀರಣದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿ ಸ.ರ. ಸುದರ್ಶನ್ ಮಾತನಾಡಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಅವರು 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಐದನೇ ತರಗತಿವರೆಗೂ ಇಂಗ್ಲೀಷ್ ಮೀಡಿಯಂ ಆರಮಭಿಸಲು ಹೊರಟಿದ್ದಾರೆ. ಅದನ್ನು ತಪ್ಪಿಸಬೇಕು ಎಂದು ಕೋರಿದರು.
ಪ. ಮಲ್ಲೇಶ್ ಮಾತೃಭಾಷೆ ಶಿಕ್ಷಣ ಮಾಧ್ಯಮ ಆಗಬೇಕು ಎಂದು ಹೋರಾಟ ನಡೆಸಿದವರು.ನೀವು 2015ರಲ್ಲೇ ಮಾತೃಭಾಷೆ ಶಿಕ್ಷಣ ಮಾಧ್ಯಮ ಆಗಬೇಕು ಎಂದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದಿದ್ದೀರಿ ಎಂದು ಮುಖ್ಯಮಂತ್ರಿಗಳನ್ನು ಸ.ರ ಸುದರ್ಶನ್ ನೆನಪಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ.ಮಲ್ಲೇಶ್ ಅವರು ಕನ್ನಡ ಮಾಧ್ಯಮದ ಬಗ್ಗೆ ಹೊಂದಿದ್ದ ಬದ್ಧತೆ ಎಲ್ಲರಿಗೂ ಗೊತ್ತಿದೆ. ಈ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.




