ಮಂಗಳೂರು: ದೇಶದಲ್ಲಿ ಉತ್ತಮ ವಿದ್ಯಾರ್ಥಿಗಳನ್ನು ಬೆಳೆಸುವಲ್ಲಿ ಅನುದಾನ ರಹಿತ ವಿದ್ಯಾ ಸಂಸ್ಥೆಗಳ ಕೊಡುಗೆ ಅಪಾರ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ಆಳ್ವಾಸ್ ಕಾಲೇಜಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಂಡ ಪದವಿ ಪೂರ್ವ ಶಿಕ್ಷಣ- ಮುಕ್ತ ಸಮ್ಮೇಳನ 2024 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಯ ಮೂಲ ಹಕ್ಕು. ಅದನ್ನು ಜಾರಿಗೆ ತರಲು ಸರ್ಕಾರದ ಜತೆ ಖಾಸಗಿ ಸಂಸ್ಥೆಗಳು ಕೈ ಜೋಡಿಸಿವೆ. ವಿದ್ಯಾರ್ಥಿಗಳು ಬಲಿಷ್ಠವಾದರೆ, ದೇಶ ಬಲಿಷ್ಠವಾಗಲು ಸಾಧ್ಯ. ವ್ಯಕ್ತಿತ್ವ ರೂಪಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ. ಶಿಕ್ಷಣ ನೀಡುವುದು ನಿಜವಾದ ದೇಶಪ್ರೇಮ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಕಾರ್ಯ ಶ್ಲಾಘನೀಯ. ಕುಪ್ಮಾ ಶಿಕ್ಷಣ ಸಂಸ್ಥೆಗಳ ಕಷ್ಟ-ಸುಖ ಹಂಚಿಕೊಳ್ಳುವ ಸಂಘಟನೆಯಾಗಬೇಕು. ಕೇವಲ ವೈದ್ಯರು ಅಥವಾ ಎಂಜಿನಿಯರ್ಗಳನ್ನು ಮಾತ್ರವಲ್ಲ, ಉತ್ತಮ ರಾಜಕಾರಣಿಗಳನ್ನೂ ರೂಪಿಸಿ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕುಪ್ಮಾದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಮಾತನಾಡಿ, ಖಾಸಗಿ ಸಂಸ್ಥೆಗಳ ಕುರಿತು ಕೀಳು ಮನೋಭಾವ ಸಲ್ಲದು. ಸಮಾಜಕ್ಕೆ ಅವರ ಕೊಡುಗೆ ಗಮನಿಸಿ. ಗೌರವಿಸಿ. ಸರ್ಕಾರ ಖಾಸಗಿ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ಎಲ್ಲರಿಗೂ ಸಮಾನ ನಿಯಮ ಇರಲಿ ಎಂದರು.
ಸಮಾಜದ ಪರಿಕಲ್ಪನೆಯ ದೃಷ್ಟಿಯಲ್ಲಿ ನಾವು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದು, ಒಮ್ಮೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು ನೋಡಿ. ದಾಖಲೆಗಳನ್ನು ಪರಿಶೀಲಿಸಿ. ಮಾರ್ಚ್ 3 ರಂದು ನಡೆಯಲಿರುವ ಪ್ರವೇಶ ಪರೀಕ್ಷೆಗೆ ಈಗಾಗಲೇ 7 ಸಾವಿರಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಎಂದರು. ವಿಧಾನ ಪರಿಷತ್ ಸದಸ್ಯ ಕೆ.ಎಲ್. ಭೋಜೇಗೌಡ ಅವರು ಮಾತನಾಡಿ, ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳನ್ನು ಒಂದುಗೂಡಿಸುವ ಸಂಘಟನೆಯ ಆರಂಭವು ಶ್ಲಾಘನೀಯ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಹದಿಹರೆಯದ ಮಕ್ಕಳು ಇರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆ ನಡೆಸುವುದು ಬಹುದೊಡ್ಡ ಸವಾಲು. ಅದನ್ನು ನೀವೆಲ್ಲ ನಿಭಾಯಿಸುತ್ತಿದ್ದೀರಿ. ನಾನು ನಿಮ್ಮ ಜೊತೆ ಇರುತ್ತೇನೆ ಎಂದರು. ಕುಪ್ಮಾದ ಅಧಿಕೃತ ವೆಬ್ಸೈಟ್ ಅನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಿಡುಗಡೆ ಮಾಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಸಂಘಟನೆಯ ಪ್ರಮುಖರಾದ ಪ್ರೊ. ನರೇಂದ್ರ ಎಲ್. ನಾಯಕ್, ಎಂ.ಬಿ.ಪುರಾಣಿಕ್, ಫಾದರ್ ಲಿಯೋ ಲಸ್ರಾದೋ, ಕೆ.ಸಿ.ನಾಯಕ್, ಡಾ.ಅಬ್ದುಲ್ ಖಾದಿರ್, ಡಾ.ಜಯಪ್ರಕಾಶ್ ಗೌಡ ಇದ್ದರು. ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.
ಸಭಾಕಾರ್ಯಕ್ರಮದ ನಂತರ ನಡೆದ ಪ್ರಥಮ ಗೋಷ್ಠಿಯಲ್ಲಿ ಕುಪ್ಮಾದ ಉದ್ದೇಶ ಹಾಗೂ ಗುರಿಗಳ ಕುರಿತು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಸುಧಾಕರ ಶೆಟ್ಟಿ ಹಾಗೂ ಶಾರದಾ ಸಮೂಹ ಸಂಸ್ಥೆಗಳ ಎಂ ಬಿ ಪುರಾಣಿಕ್, ಎಕ್ಸ್ಪರ್ಟ್ ಸಂಸ್ಥೆಯ ಅಧ್ಯಕ್ಷ ಹಾಗೂ ಕುಪ್ಮಾದ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಸಂವಾದ ನಡೆಸಿಕೊಟ್ಟರು. ಕುಪ್ಮಾವನ್ನು ಸಂಘಟಿತವಾಗಿ ಪ್ರತಿ ಜಿಲ್ಲೆಯಲ್ಲಿ ನಿರ್ಮಾಣ ಮಾಡುವ ಕುರಿತು ಎಕ್ಸ್ಲೆಂಟ್ ಸಂಸ್ಥೆಯ ಯುವರಾಜ್ ಜೈನ್, ಶಕ್ತಿ ಶಿಕ್ಷಣ ಸಂಸ್ಥೆಗಳ ಕೆ.ಸಿ. ನಾಯ್ಕ್ ಹಾಗೂ ಮೈಸೂರಿನ ವಿಶ್ವಭಾರತಿ ಶಿಕ್ಷಣ ಸಂಸ್ಥೆಗಳ ವಿಶ್ವನಾಥ್ ಶೇಷಾಚಲ ಚರ್ಚಿಸಿದರು. ನಂತರ ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.