Tuesday, June 24, 2025
25.1 C
Bengaluru
Google search engine
LIVE
ಮನೆರಾಜಕೀಯನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಏಕರೂಪ ತೆರಿಗೆ - ಸಚಿವ ಈಶ್ವರ್​​ ಖಂಡ್ರೆ

ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಏಕರೂಪ ತೆರಿಗೆ – ಸಚಿವ ಈಶ್ವರ್​​ ಖಂಡ್ರೆ


ಬೆಂಗಳೂರು – ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯದ್ಯಂತ ಏಕರೂಪವಾಗಿ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು.


ಅಕ್ರಮ ಬಡಾವಣೆಗೆ ಜೈಲು ಶಿಕ್ಷೆ

ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು


ನಿಯಮ ಸರಳೀಕರಣ

ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು.

ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಸಲಹೆ ನೀಡಿದರು.
ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೇ ಇಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಡೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಬಿ ವಹಿಯಡಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಸೂಚಿಸಿದರು.
ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್ ಮತ್ತು ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments