ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಆಗಸ್ಟ್ 20, 1931 ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.
ಭೈರಪ್ಪನವರಿಗೆ ಅವರದೇ ಆದ ದೊಡ್ಡ ಓದುಗ ಬಳಗವಿದ್ದು, ಇಂಗ್ಲಿಷ್ ಸೇರಿ ವಿವಿಧ ಭಾಷೆಗಳಿಗೆ ಅವರ ಕಾದಂಬರಿಗಳು ಅನುವಾದ ಗೊಂಡಿವೆ. ಗೃಹಭಂಗ,ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಸೇರಿ ಹಲವು ಮರಾಠಿ ಓದುಗರ ಮೆಚ್ಚುಗೆಗೂ ಪಾತ್ರವಾಗಿದ್ದವು. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲಿಯೇ ‘ಪರ್ವ’ ಅತ್ಯಂತ ಜನಪ್ರಿಯ.94 ವರ್ಷ ಪೂರೈಸಿದರೂ ಸಹ ಇಂದಿಗೂ ಸಹ ಭೈರಪ್ಪನವರು ಜೀವನದ ಬಗೆಗಿನ ಉತ್ಸಾಹವನ್ನು ಹಾಗೆಯೇ ಉಳಿಸಿಕೊಂಡಿದ್ದರು.


