ಕನಕಪುರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕನಕಪುರದ ದೊಡ್ಡಆಲಹಳ್ಳಿಯಲ್ಲಿ ಶಿವಕುಮಾರ್ ಅವರು ಚುನಾವಣೆ ಪ್ರಚಾರದ ಮಧ್ಯೆ ಮಾಧ್ಯಮಗಳ ಜತೆ ಬುಧವಾರ ಮಾತನಾಡಿದರು. ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದರು.
ಕ್ಷೇತ್ರ ಹಿಂದೆ ಹೇಗಿತ್ತು, ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ಜನರಿಗೆ ಗೊತ್ತಿದೆ. ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ ಎಂದು ಜನರಿಗೆ ಗೊತ್ತಿದೆ. ಬಿಜೆಪಿಯವರಾಗಲಿ, ಕುಮಾರಸ್ವಾಮಿ ಅವರಾಗಲಿ ಅವರ ಊರುಗಳಲ್ಲಿ ಇಂತಹ ಕೆಲಸ ಮಾಡಿದ್ದಾರಾ? ನಾವು ನಮ್ಮ ದೇಹ ಇರುವುದೇ ಜನರಿಗಾಗಿ. ನಾವು ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.