ಯಾದಗಿರಿಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೆಬ್ರವರಿ 21ರಂದು ನಡೆದ ಭಾಷಣದಲ್ಲಿ, “ಗಾಂಧಿ ಚರಕ ತಿರುಗಿಸಿದ್ದರಿಂದಲೇ ಸ್ವಾತಂತ್ರ್ಯ ಬಂದಿಲ್ಲ, ಹಾಗಿದ್ದರೆ ನಾನು ಚರಕ ತಿರುಗಿಸಿದರೆ ಸಿಎಂ ಆಗುತ್ತೇನಾ?” ಎಂದು ಪ್ರಶ್ನಿಸಿದ್ದಲ್ಲದೆ, ನೆಹರು ಅವರ ವೈಯಕ್ತಿಕ ಜೀವನದ ಬಗ್ಗೆ ಸ್ಫೋಟಕ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದರು. ದ್ವೇಷ ಭಾಷಣ ಹಾಗೂ ಸಮುದಾಯಗಳ ನಡುವೆ ಅಶಾಂತಿ ಉಂಟುಮಾಡುವ ಪ್ರಯತ್ನದ ಆರೋಪದಡಿ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದ್ದು, ಮುಸ್ಲಿಮರು ‘ವಂದೇ ಮಾತರಂ’ ಎನ್ನದಿದ್ದರೆ ಪಾಕಿಸ್ತಾನಕ್ಕೆ ಹೋಗಲಿ ಎಂಬ ಅವರ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ನಾಂದಿ ಹಾಡಿದೆ.


