ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳ ಹಿನ್ನೆಲೆ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಡೆದಿದೆ.
ಪ್ರೇಮಾ (59) ಮಹಿಳೆ ಮೃತದುರ್ದೈವಿ. ಉಜ್ಜೀವನ್ ಬ್ಯಾಂಕ್ನಿಂದ ಪ್ರೇಮ 6 ಲಕ್ಷ ರೂ. ಸಾಲ ಪಡೆದಿದ್ದರು. ಈಗಾಗಲೇ 6 ಲಕ್ಷ ರೂ. ಹಣವನ್ನು ಕಟ್ಟಿದ್ದರು. ಇನ್ನೂ 6 ಲಕ್ಷ ರೂ. ಹಣ ಕಟ್ಟಬೇಕೆಂದು ಪೀಡಿಸುತ್ತಿದ್ದ ಉಜ್ಜೀವನ್ ಸಿಬ್ಬಂದಿ, ಪ್ರೇಮಾ ಮನೆ ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಿನ್ನೆ ಕ್ರಿಮಿನಾಶಕ ಸೇವನೆ ಮಾಡಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದರು.
ಪ್ರೇಮಾರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಪ್ರೇಮಾ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪ್ರೇಮ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಮೃತ ಪ್ರೇಮ ಮಗಳು ಮಾಣಿಕ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ತಾಯಿ ಸಾವಿಗೆ ಉಜ್ಜೀವನ್ ಬ್ಯಾಂಕ್ ಸಿಬ್ಬಂದಿಯೇ ಕಾರಣವೆಂದು ಆರೋಪಿಸಿದ್ದು, ನಮ್ಮ ತಾಯಿ 6 ಲಕ್ಷ ರೂ. ಸಾಲ ತೆಗೆದುಕೊಂಡಿದ್ದರು. ಇಲ್ಲಿಯವರೆಗೆ 6 ಲಕ್ಷ ರೂ. ಹಣವನ್ನು ನಮ್ಮ ತಾಯಿ ಕಟ್ಟಿದ್ರು, ನೀವು ಕಟ್ಟಿರುವ ಹಣ ಬಡ್ಡಿಗೆ ಜಮೆ ಆಗಿದೆ, ಇನ್ನು ಅಸಲು ಆಗೇ ಇದೇ ಎಂದು ಮನೆ ಜಪ್ತಿ ಮಾಡಿದ್ದಾರೆ. ಈಗ ನಮ್ಮ ತಾಯಿಯನ್ನು ಕಳೆದುಕೊಂಡಿದ್ದೇವೆ. ನಮಗೆ ಯಾರು ದಿಕ್ಕು ಎಂದು ಅಳಲು ತೋಡಿಕೊಂಡರು.