ಅಕ್ರಮ ಸಂಬಂಧದ ಗುಟ್ಟು ರಟ್ಟಾಗುವ ಭಯಕ್ಕೆ ಮಹಿಳೆಯ ಹತ್ಯೆ!

ದೇವನಹಳ್ಳಿ ಸಮೀಪದ ರಾಜಕಾಲುವೆಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಮಹಿಳೆಯ ಶವದ ಪ್ರಕರಣಕ್ಕೆ ಈಗ ಭೀಕರ ಟ್ವಿಸ್ಟ್ ಸಿಕ್ಕಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ನಿರ್ಮಲಾ (35) ಎಂಬಾಕೆಯನ್ನು ಮೌನೀಶ್ ಎಂಬಾತ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನುವ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಹತ್ಯೆಯ ನಂತರ ಶವವನ್ನು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಈ ರಾಕ್ಷಸನನ್ನು ದೇವನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಫೆಬ್ರವರಿ 25ರಂದು ರಾಜಕಾಲುವೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾದಾಗ ಇಡೀ ಭಾಗದಲ್ಲಿ ಆತಂಕ ಮೂಡಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಆರೋಪಿ ಮೌನೀಶ್ನ ಸುಳಿವು ಸಿಕ್ಕಿದೆ. ವಿಚಾರಣೆಯ ವೇಳೆ ಆರೋಪಿಯು ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು, ತನ್ನ ಪತ್ನಿಗೆ ಈ ಅಕ್ರಮ ಸಂಬಂಧದ ವಿಷಯ ತಿಳಿದುಬಿಡಬಹುದು ಎಂಬ ಭಯದಿಂದ ನಿರ್ಮಲಾಳನ್ನು ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.
ತನ್ನ ಸಂಸಾರಕ್ಕೆ ತೊಂದರೆಯಾಗಬಾರದು ಎಂಬ ಸ್ವಾರ್ಥಕ್ಕಾಗಿ ಜೊತೆಗಿದ್ದ ಮಹಿಳೆಯನ್ನೇ ಬಲಿಪಡೆದ ಈತನ ಕೃತ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸಿದ್ದಾರೆ. ತನಿಖಾ ತಂಡದ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ನಿಗೂಢವಾಗಿದ್ದ ಈ ಕೊಲೆ ಕೇಸ್ ಕೇವಲ ಕೆಲವೇ ದಿನಗಳಲ್ಲಿ ಅಂತ್ಯ ಕಂಡಿದೆ.




