ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೈಕಲ್ ತುಳಿಯುವ ಮೂಲಕ ಪಕ್ಷ ಕಟ್ಟಿ ಬೆಳೆಸಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ ವಿರುದ್ಧ ಧ್ವನಿ ಎತ್ತುವುದು ಸರಿಯಲ್ಲ. ನಾವು ಹೋರಾಟ ಯಾರ ವಿರುದ್ಧ ಮಾಡಬೇಕು ಎನ್ನುವುದನ್ನು ಮೊದಲು ಅರಿತುಕೊಳ್ಳಬೇಕು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ
ಕಲಬುರಗಿ(ಡಿ.07): ಸ್ವಪಕ್ಷದ ವಿರುದ್ಧ ಹಾಗೂ ನಾಯಕರ ವಿರುದ್ಧ ಮಾತನಾಡುವುದನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೈಕಲ್ ತುಳಿಯುವ ಮೂಲಕ ಪಕ್ಷ ಕಟ್ಟಿ ಬೆಳೆಸಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ ವಿರುದ್ಧ ಧ್ವನಿ ಎತ್ತುವುದು ಸರಿಯಲ್ಲ. ನಾವು ಹೋರಾಟ ಯಾರ ವಿರುದ್ಧ ಮಾಡಬೇಕು ಎನ್ನುವುದನ್ನು ಮೊದಲು ಅರಿತುಕೊಳ್ಳಬೇಕು. ಮಾತೆತ್ತಿದ್ದರೇ ಹಿಂದುತ್ವದ ಬಗ್ಗೆ ಮಾತನಾಡುವವರು ತಾವು ಯಾವ ಪಕ್ಕದಲ್ಲಿ ಇದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕೆಲವು ವಿಷಯಗಳ ಕುರಿತು ಚರ್ಚಿಸಲು ದೆಹಲಿ ಯತ್ತ ಹೋಗುತ್ತೇವೆ, ಕಾದು ನೋಡಿ. ಈಗಲೇ ಎಲ್ಲವನ್ನು ಬಹಿರಂಗಪ ಡಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನೀತಿ ಗಳ ವಿರುದ್ಧ ಒಂದಾಗಿ ಹೋರಾಟ ಮಾಡಿ ಬಿಜೆಪಿ ಜೊತೆ ಇರಬೇಕಾದವರು, ಅವರದ್ದೇ ಪ್ರತ್ಯೇಕ ತಂಡಗಳನ್ನು ಮಾಡಿಕೊಂಡು ಸುತ್ತಾಡುತ್ತಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ವಕ್ಫ್ ವಿರುದ್ಧ ರಾಜ್ಯಾದ್ಯಂತ ಪ್ರವಾಸ ಮಾಡಿ, ನಮ್ಮ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಹೋಗುತ್ತಿರುವ ವಿಜಯೇಂದ್ರ ವ್ಯಕ್ತಿಯಲ್ಲ. ಬದಲಾಗಿ ಅವರು ನಮ್ಮ ಪಕ್ಷದ ದೊಡ್ಡ ಶಕ್ತಿಯಾಗಿದ್ದಾರೆ. ಹೀಗಾಗಿ ನಾವೆಲ್ಲರೂ ಒಟ್ಟಾಗಿ ಹೋಗಬೇಕಾದರೆ ಯತ್ನಾಳ್ ಅವರು ನಡುವಳಿಕೆಗಳನ್ನು ಬದಲು ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರ ದೀನ ದಲಿತರ, ರೈತರ, ಮಠ ಮಾನ್ಯಗಳ ಜಮೀನು ಕಬಳಿಸುವ ಹುನ್ನಾರ ನಡೆಸುತ್ತಿದೆ. ನಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಇಲ್ಲಿ ಆಗುತ್ತಿರುವ ವಾಸ್ತವಾಂಶವನ್ನು ಕುರಿತು ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.